ವಿಜಯಪುರ: ರಾಜ್ಯದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ನಿಲಯಗಳಿಗೆ ಅಗತ್ಯವಿರುವ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಿ, ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸರ್ಕಾರ ನೆರವಾಗಬೇಕು ಎಂದು ಕರ್ನಾಟಕ ದಲಿತ ಜನ ಸೇನೆಯ ವತಿಯಿಂದ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಟಿ.ಭರತ್ ಅವರು, ರಾಜ್ಯ ಸರ್ಕಾರ, ೨೦೨೪-೨೫ ನೇ ಸಾಲಿನಲ್ಲಿ ರಾಜ್ಯ ಬಜೆಟ್ ನಲ್ಲಿ ಸುಮಾರು ೨೮೬೦೮ ಕೋಟಿ ಅನುದಾನವನ್ನು ಘೋಷಿಸಿದೆ. ಸಮಾಜ ಕಲ್ಯಾಣ ಇಲಾಖೆಯ ಅಧೀನದ ವಸತಿ ನಿಲಯಗಳಲ್ಲಿ ರಾಜ್ಯಾಧ್ಯಂತ ಬಡ ವಿದ್ಯಾರ್ಥಿಗಳು ವಸತಿ ಸೌಕರ್ಯ ಪಡೆಯುತ್ತಿದ್ದು, ಅವರಿಗೆ ಅಗತ್ಯವಿರುವಷ್ಟು ಅನುದಾನ ಬಿಡುಗಡೆಯಾಗದೆ, ಮೂಲಭೂತ ಸೌಕರ್ಯಗಳ ಕೊರತೆಯಿಂದ ಸಂಕಷ್ಟ ಎದುರಿಸುತ್ತಿದ್ದಾರೆ.
ಅಧಿಕಾರಿಗಳು ಅನುದಾನದ ಕೊರತೆಯಿಂದ ನಿಸ್ಸಾಹಕರಾಗಿದ್ದಾರೆ. ಇಲಾಖೆಯಿಂದ ಬಿಡುಗಡೆಯಾಗುತ್ತಿದ್ದ ಪ್ರೋತ್ಸಾಹಧನ (ಪ್ರೈಸ್ ಮನಿ) ಹೆಚ್ಚು ಅಂಕಗಳು ಗಳಿಸಿರುವ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿವೇನ ಬಿಡುಗಡೆಯಾಗುತ್ತಿಲ್ಲ ಆದ್ದರಿಂದ ಬಜೆಟ್ ನಲ್ಲಿ ಘೋಷಣೆ ಮಾಡಿರುವಂತೆ ಸಂಪೂರ್ಣ ಅನುದಾನವನ್ನು ಬಿಡುಗಡೆಗೊಳಿಸುವಂತೆ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.
ವಸತಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರನ್ನು ಮುಂದಿನ ಶೈಕ್ಷಣಿಕ ವರ್ಷದ ಆರಂಭದವರೆಗೂ ಯಾವುದೇ ಕಾರಣಕ್ಕೂ ವರ್ಗಾವಣೆ ಮಾಡಬಾರದು. ಒಂದು ವೇಳೆ ವರ್ಗಾವಣೆ ಮಾಡಿದರೆ, ಮಕ್ಕಳ ಕಲಿಕೆಯ ಮೇಲೆ ಪರಿಣಾಮ ಬೀರಲಿದೆ. ಈಗಿರುವ ಶಿಕ್ಷಕರು, ಮಕ್ಕಳ ಕಲಿಕಾ ಸಾಮರ್ಥ್ಯವನ್ನು ಅರಿತುಕೊಂಡು ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಸಿದ್ಧತೆ ಮಾಡಿಕೊಂಡಿರುತ್ತಾರೆ.
ಈ ಸಮಯದಲ್ಲಿ ವರ್ಗಾವಣೆಗಾಗಿ ಅರ್ಜಿ ಆಹ್ವಾನಿಸಿರುವುದು ಹಾಸ್ಯಾಸ್ಪದವಾಗಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆ ಮುಕ್ತಾಯವಾಗುವವರೆಗೂ ಯಾರನ್ನೂ ವರ್ಗಾವಣೆ ಮಾಡಬಾರದು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.ಎಸ್.ಸಿ.ಪಿ, ಟಿ.ಎಸ್.ಪಿ. ಯೋಜನೆಗಳಿಗೆ ಅನುದಾನವನ್ನು ಒದಗಿಸದ ಕಾರಣ, ಗ್ರಾಮೀಣ ಪ್ರದೇಶಗಳಲ್ಲಿ ಆಗಬೇಕಾಗಿರುವ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಈ ಅನುದಾನವನ್ನು ಶೀಘ್ರವಾಗಿ ಬಿಡುಗಡೆ ಮಾಡಬೇಕು ಎಂದು ಮನವಿಯಲ್ಲಿ ಕೋರಿದ್ದಾರೆ.