ಬೆಂಗಳೂರು: ಕೋಗಿಲು ಸಮೀಪ ಅಕ್ರಮ ಕಟ್ಟಡಗಳ ನೆಲಸಮ ವಿಚಾರದಲ್ಲಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಅಲ್ಲಿನ ಸಂಸದ ಕೆ.ಸಿ.ವೇಣುಗೋಪಾಲ್ ಅವರು ಮಧ್ಯೆ ಪ್ರವೇಶಿಸಿರುವುದಕ್ಕೆ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ.
ಈ ಕುರಿತು ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಬೆಂಗಳೂರಿನ ಕೋಗಿಲು ಬಡಾವಣೆಯ ಅಕ್ರಮ ನಿವಾಸಿಗಳ ತೆರವುಗೊಳಿಸಿರುವ ಕ್ರಮ ಕೈಗೊಂಡಿರುವ GBA ಕ್ರಮವನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಮರ್ಥಿಸಿಕೊಂಡು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಹೇಳಿಕೆಯನ್ನು ರಾಜಕೀಯ ಗಿಮಿಕ್ ಎಂದು ಟೀಕಿಸಿದ್ದರು, ಇದರ ಬೆನ್ನಲ್ಲೇ ಕಾಂಗ್ರೆಸ್ ಪ್ರಧಾನಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ರವರ ಹೇಳಿಕೆಗೆ ಮಣಿದಂತೆ ಪ್ರತಿಕ್ರಿಯಿಸಿರುವ ಡಿ.ಕೆ ಶಿವಕುಮಾರ್ ರವರ ಊಸರವಳ್ಳಿ ಬಣ್ಣದ ಮಾತುಗಳು ಕರ್ನಾಟಕದ ಸ್ವಾಭಿಮಾನದ ಘನತೆಯನ್ನು ಕುಗ್ಗಿಸಿದೆ ಎಂದು ಕಿಡಿದ್ದಾರೆ.
ಮುಂದೆ ಬರುವ ಕೇರಳ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇರಳ ಮೂಲದ ಕೆ.ಸಿ. ವೇಣುಗೋಪಾಲ್ ರವರು ಕರ್ನಾಟಕ ಸರ್ಕಾರದ ಮೇಲೆ ತಾವು ನಿಯಂತ್ರಣ ಸಾಧಿಸಿದ್ದೇವೆಂಬುದನ್ನು ಸಾಕ್ಷೀಕರಿಸುವ ನಿಟ್ಟಿನಲ್ಲಿ ಕೋಗಿಲು ಬಡಾವಣೆಯ ಪ್ರಕರಣವನ್ನು ಎ.ಐ.ಸಿ.ಸಿ ಗಂಭೀರವಾಗಿ ಪರಿಗಣಿಸಿದೆ.
ಕಾಂಗ್ರೆಸ್ ಸರ್ಕಾರ ಮಾನವೀಯ ದೃಷ್ಠಿಕೋನ ಹರಿಸಿಲ್ಲ, ಎಂದು ಅಸಮಾಧಾನಿಸಿ ಸಂತ್ರಸ್ತರಿಗೆ ಸೂಕ್ತ ಪುನರ್ವಸತಿ ಕಲ್ಪಿಸಿಕೊಡುವ ಭರವಸೆ ನೀಡುವ ಹೇಳಿಕೆ ಬಿಡುಗಡೆ ಮಾಡಿರುವುದನ್ನು ಗಮನಿಸಿದರೆ ಕೇರಳ ಚುನಾವಣಾ ರಾಜಕೀಯಕ್ಕೆ ಕರ್ನಾಟಕದ ಹಿತಾಸಕ್ತಿ ಬಲಿಕೊಡಲು ಕಾಂಗ್ರೆಸ್ ಹೈ ಕಮಾಂಡ್ ಸಿದ್ದವಾದಂತೆ ಕಾಣುತ್ತಿದೆ. ಈ ಹಿಂದೆ ಅಂದಿನ ವಯನಾಡ್ ಸಂಸದ ರಾಹುಲ್ ಗಾಂಧಿ ಅವರನ್ನು ಖುಷಿ ಪಡಿಸಲು ಕೇರಳದಲ್ಲಿ ಆನೆ ದಾಳಿಗೊಳಗಾದವರು ಹಾಗೂ ನೆರೆ ಹಾವಳಿಯಲ್ಲಿ ಸಂಕಷ್ಟಕ್ಕೆ ಸಿಲುಕಿದವರಿಗೆ ಮನೆ ಕಟ್ಟಿಕೊಡುವ ಕಾರ್ಯದಲ್ಲಿ ವಿಶೇಷ ಆಸಕ್ತಿ ವಹಿಸಿದ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪ್ರತೀ ಹಂತದಲ್ಲೂ ಕರ್ನಾಟಕದಲ್ಲಿ ಕೇರಳ ದರ್ಬಾರ್ ನಡೆಯಲು ಅವಕಾಶ ಮಾಡಿಕೊಡುತ್ತಿರುವುದು ಕನ್ನಡಿಗರ ಸ್ವಾಭಿಮಾನವನ್ನು ಅಡವಿಟ್ಟಂತಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.



