`ಸರ್ಕಾರಿ ನ್ಯಾಯಬೆಲೆ ಅಂಗಡಿ’ ಹೀಗೊಂದು ಹೆಸರಿನಲ್ಲಿ ಕನ್ನಡದಲ್ಲಿ ಚಿತ್ರವೊಂದು ತೆರೆಗೆ ಬರಲು ತಯಾರಾಗುತ್ತಿದೆ. ಕನ್ನಡ ಚಿತ್ರರಂಗದಲ್ಲಿ ಇಲ್ಲಿಯವರೆಗೆ ಹೆಚ್ಚಾಗಿ ಗ್ಲಾಮರಸ್ ಪಾತ್ರಗಳಲ್ಲಿ ಮಿಂಚಿದ್ದ ನಟಿ ರಾಗಿಣಿ ದ್ವಿವೇದಿ, `ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದಲ್ಲಿ ಪಕ್ಕಾ ಹಳ್ಳಿ ಹುಡುಗಿಯ ಪಾತ್ರದಲ್ಲಿ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ. ಈಗಾಗಲೇ `ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಬಹುತೇಕ ಸ್ಕ್ರಿಪ್ಟ್ ಕಾರ್ಯಗಳು ಪೂರ್ಣಗೊಂಡಿದ್ದು, ಇತ್ತೀಚೆಗಷ್ಟೇ ಚಿತ್ರತಂಡ ಸಿನೆಮಾದ ಟೈಟಲ್ ಅನ್ನು ಬಿಡುಗಡೆಗೊಳಿಸಿತ್ತು. ಇದೀಗ ಚಿತ್ರತಂಡ, ಹಾಡುಗಳ ಧ್ವನಿಮುದ್ರಣ ಆರಂಭಿಸುವ ಮೂಲಕ `ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಪ್ರೊಡಕ್ಷನ್ ಕಾರ್ಯಗಳಿಗೆ ಚಾಲನೆ ನೀಡಿದೆ.
ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಶಾಖಾ ಮಠದಲ್ಲಿ ನಡೆದ ಸಮಾರಂಭದಲ್ಲಿ, ಸಂಗೀತ ನಿರ್ದೇಶಕ ಅನಂತ್ ಆರ್ಯನ್ ಸಂಗೀತ ಸಂಯೋಜನೆಯಲ್ಲಿ `ಸರ್ಕಾರಿ ನ್ಯಾಯಬೆಲೆ ಅಂಗಡಿ’ಚಿತ್ರದ ಹಾಡುಗಳ ಮುದ್ರಣ ಕಾರ್ಯವನ್ನು ಅರಂಭಿಸಲಾಯಿತು. ಈ ವೇಳೆ ಚಿತ್ರದ ನಾಯಕ ನಟಿ ರಾಗಿಣಿ ದ್ವಿವೇದಿ, `ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ’ದ ಅಧ್ಯಕ್ಷ ಟಿ. ಕೃಷ್ಣಪ್ಪ, ನಟಿ ಗೀತಪ್ರಿಯ, ನಿರ್ಮಾಪಕಿಯರಾದ ತೇಜು ಮೂರ್ತಿ, ಎಸ್. ಪದ್ಮಾವತಿ ಚಂದ್ರಶೇಖರ್, ಹಿರಿಯ ನಿರ್ಮಾಪಕರಾದ ಭಾ. ಮ. ಹರೀಶ್, ಭಾ. ಮ. ಗಿರೀಶ್, ಹಿರಿಯ ನಿರ್ದೇಶಕ ಬಿ. ರಾಮಮೂರ್ತಿ, `ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ನಿರ್ದೇಶಕ ಸಾತ್ವಿಕ್ ಪವನ್ ಕುಮಾರ್ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಮತ್ತು ಚಿತ್ರದ ಕಲಾವಿದರು, ತಂತ್ರಜ್ಞರು ಹಾಜರಿದ್ದರು.
ಇದೇ ವೇಳೆ ಮಾತನಾಡಿದ ನಟಿ ರಾಗಿಣಿ ದ್ವಿವೇದಿ, `ಇಲ್ಲಿಯವರೆಗೆ ನಾನು ಮಾಡಿರುವ ಪಾತ್ರಗಳಿಗಿಂತ ಸಂಪೂರ್ಣ ವಿಭಿನ್ನವಾದ ಕಥೆ ಮತ್ತು ಪಾತ್ರ ಈ ಸಿನೆಮಾದಲ್ಲಿದೆ. ಇಡೀ ಚಿತ್ರದ ಕಥೆ ನನ್ನ ಪಾತ್ರದ ಸುತ್ತ ನಡೆಯುತ್ತದೆ. ಇಂದಿನ ಸಮಾಜದಲ್ಲಿ ಆಹಾರ ವಿತರಣೆಯಲ್ಲೂ ಏನೆಲ್ಲಾ ನಡೆಯುತ್ತದೆ ಎಂಬುದನ್ನು ಈ ಸಿನೆಮಾದಲ್ಲಿ ಹೇಳಲಾಗುತ್ತಿದೆ. ನಮಗೆ ಗೊತ್ತಿಲ್ಲದ ಶಾಕಿಂಗ್ ಎನಿಸುವಂಥ ಅನೇಕ ವಿಷಯಗಳು ಈ ಸಿನೆಮಾದಲ್ಲಿದೆ. ನನಗೂ ಕೂಡ ಈ ಸಿನೆಮಾದ ಕಥೆ ಮತ್ತು ಪಾತ್ರದ ಮೇಲೆ ಸಾಕಷ್ಟು ನಿರೀಕ್ಷೆಯಿದೆ. ನನ್ನ ಸಿನೆಮಾ ಕೆರಿಯರ್ನಲ್ಲಿ ನಿಜವಾಗಿಯೂ ಇದೊಂದು ವಿಭಿನ್ನ ಸಿನೆಮಾವಾಗಲಿದೆ ಎಂಬ ನಂಬಿಕೆಯಿದೆ’ ಎಂದರು. `ಜಯಶಂಕರ ಟಾಕೀಸ್’ ಬ್ಯಾನರಿನಲ್ಲಿ `ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರವನ್ನು ತೇಜು ಮೂರ್ತಿ ಮತ್ತು ಎಸ್. ಪದ್ಮಾವತಿ ಚಂದ್ರಶೇಖರ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಹಿರಿಯ ನಿರ್ದೇಶಕ ಬಿ. ರಾಮಮೂರ್ತಿ `ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರಕ್ಕೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆಯುತ್ತಿದ್ದಾರೆಆರ್ಯನ್ ಸಂಗೀತ ಸಂಯೋಜಿಸುತ್ತಿದ್ದಾರೆ.