ಬೆಂಗಳೂರು: ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪತ್ರಕರ್ತರಿಗೆ ತರಬೇತಿ ನೀಡಲು ಕಾಲೇಜು ಆರಂಭಿಸಿ. ಹಿರಿಯ ಪತ್ರಕರ್ತರ ಅನುಭವ ಬಳಸಿಕೊಂಡು ಅವರಲ್ಲಿ ನೈತಿಕ ಮೌಲ್ಯ ಬೆಳೆಸಿ. ಸರ್ಕಾರ ಇದಕ್ಕಾಗಿ 1 ಎಕರೆ ಜಾಗ ನೀಡಲು ಸಿದ್ಧ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಬೆಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಿವಕುಮಾರ್ ಅವರು ಮಂಗಳವಾರ ಮಾತನಾಡಿದರು. ನೀವು ಹೇಳುವುದನ್ನೇ ನಿಜ ಎಂದು ಭಾವಿಸಿ ನಾವು ಪ್ರತಿಕ್ರಿಯೆ ನೀಡುತ್ತೇವೆ. ಕುಮಾರಸ್ವಾಮಿ ನೀಡದ ಹೇಳಿಕೆಯನ್ನು, ಅವರು ಹೇಳಿದ್ದಾರೆ ಎಂದು ಸುಳ್ಳು ಹೇಳಿ ನಮ್ಮ ಬಳಿ ಪ್ರತಿಕ್ರಿಯೆ ಕೇಳುತ್ತೀರಿ. ಈ ರೀತಿ ಕೇಳುವವರಿಗೆ, ದಾರಿ ತಪ್ಪಿಸುವವರಿಗೆ ಪ್ರೆಸ್ ಕ್ಲಬ್ ನಿಂದ ತರಬೇತಿ ನೀಡಬೇಕು. ಸಮಾಜ ಒಡೆದು, ಅಶಾಂತಿ ಮೂಡಿಸುವವರಿಗೆ ಪಾಠ ಕಲಿಸಬೇಕು. ಬಿಡಿಎ ಅಧ್ಯಕ್ಷರು ಇಲ್ಲೇ ಇದ್ದಾರೆ, ಅರ್ಜಿ ಹಾಕಿ, ಎಲ್ಲಾದರೂ ಅಗತ್ಯ ಜಾಗ ನೀಡುತ್ತೇವೆ” ಎಂದರು.
“ಈ ವರ್ಷ ಬದುಕಿನಲ್ಲಿ ಸಾಧನೆ ಮಾಡಿದವರಿಗೆ ಇಂದು ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿ ಪುರಸ್ಕೃತರಿಗೆ ವೈಯಕ್ತಿಕವಾಗಿ ಹಾಗೂ ಸರ್ಕಾರದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ. ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ಈ ಅಭಿನಂದನೆ ಸಲ್ಲಬೇಕು. ಸಗಣಿಗೆ ಗರಿಕೆ ಸಿಕ್ಕಿಸಿ ಗಣಪತಿ ಎಂದು ಪೂಜೆ ಮಾಡುತ್ತೇವೆ. ಅದೇ ರೀತಿ ತಮ್ಮ ತಮ್ಮ ಸಂಸ್ಥೆಗಳಲ್ಲಿ ಎಲ್ಲರೂ ಪ್ರಮುಖ ಪಾತ್ರ ವಹಿಸುತ್ತಾರೆ. ಯಾರೂ ಪ್ರಯೋಜನಕ್ಕೆ ಇಲ್ಲ ಎಂದು ಭಾವಿಸಲಾಗದು. ಈ ಜಗತ್ತಿನಲ್ಲಿ ಎಲ್ಲರಿಗೂ ಅವಕಾಶ ಇದೆ ಎಂದು ಡಿವಿಜಿ ಅವರು ತಮ್ಮ ಕಗ್ಗದಲ್ಲಿ ಹೇಳಿದ್ದಾರೆ” ಎಂದರು.
“ಇಂದು ನಿಮಗೆ ಸನ್ಮಾನ ಮಾಡಲಾಗಿದೆ. ಈ ಹಾರ ಬಹಳ ಭಾರ. ಈ ಸನ್ಮಾನದಿಂದ ನಿಮ್ಮ ಮೇಲೆ ಜವಾಬ್ದಾರಿ ಹೆಚ್ಚುತ್ತದೆ. ನನಗೆ ಮಾಧ್ಯಮ ಎಂದರೆ ಸ್ವಲ್ಪ ಅಲರ್ಜಿ. ಆದರೂ ನಾನು ನಿಮ್ಮನ್ನು ಬಿಡುವ ಹಾಗಿಲ್ಲ, ನೀವು ನನ್ನನ್ನು ಬಿಡುವ ಹಾಗಿಲ್ಲ. ದಿನ ಬೆಳಗಾದರೆ ನನ್ನ ಮನೆ ಬಳಿಯೇ ಬಂದು ಮೈಕ್ ಅನ್ನು ನನ್ನ ಮುಖಕ್ಕೆ ತಂದು ಇಡುತ್ತಾರೆ” ಎಂದು ಹೇಳಿದರು.



