ಬೇಲೂರು: ಜಿಲ್ಲೆಯ ಅಭಿವೃದ್ಧಿ ಹಾಗೂ ಆಡಳಿತಾತ್ಮಕ ಕಾರ್ಯಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಸ್ಥಳೀಯ ಜನಪ್ರತಿನಿಧಿಗಳಿಗೆ ಹೆಚ್ಚಿನ ಅವಕಾಶ ನೀಡಬೇಕು ಎಂದು ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ವಿರೂಪಾಕ್ಷ ಹೇಳಿದರು.
ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇರೆ ಜಿಲ್ಲೆಗಳ ಸಚಿವರನ್ನು ಉಸ್ತುವಾರಿಯಾಗಿ ನೇಮಿಸುವುದರಿಂದ ಅವರು ತಮ್ಮ ಸ್ವಂತ ಜಿಲ್ಲೆಗಳ ಅಭಿವೃದ್ಧಿ ಕಾರ್ಯಗಳತ್ತ ಹೆಚ್ಚಿನ ಗಮನ ಹರಿಸುವ ಸಾಧ್ಯತೆ ಇರುತ್ತದೆ. ಹೀಗಾಗಿ ಜಿಲ್ಲೆಯ ಸಮಸ್ಯೆಗಳು ಹಾಗೂ ಅಗತ್ಯತೆಗಳನ್ನು ಸಮಗ್ರವಾಗಿ ಅರಿತಿರುವ ಸ್ಥಳೀಯ ಸಚಿವರೇ ಉಸ್ತುವಾರಿ ವಹಿಸಿದರೆ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ವೇಗ ಸಿಗಲಿದೆ ಎಂದು ಹೇಳಿದರು.
ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರಿಗೆ ಸಚಿವ ಸ್ಥಾನ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ನೀಡಿದರೆ ಕಾಂಗ್ರೆಸ್ ಪಕ್ಷ ಜಿಲ್ಲೆಯಲ್ಲಿ ಮತ್ತಷ್ಟು ಬಲಿಷ್ಠವಾಗಲಿದೆ. ಜೊತೆಗೆ ಪಕ್ಷದ ಸಂಘಟನೆ ವಿಸ್ತರಣೆಗೆ ಮತ್ತು ಮುಂಬರುವ ಚುನಾವಣೆಗಳನ್ನು ಯಶಸ್ವಿಯಾಗಿ ಎದುರಿಸಲು ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.
ಪ್ರಸ್ತುತ ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆಯ ನಂತರ ಬೇಲೂರಿನಿಂದ ಬೆಂಗಳೂರಿಗೆ ನಿಯೋಗವೊಂದನ್ನು ಕರೆದೊಯ್ದು, ಕೆ.ಎಂ. ಶಿವಲಿಂಗೇಗೌಡರಿಗೆ ಸಚಿವ ಸ್ಥಾನ ನೀಡುವಂತೆ ರಾಜ್ಯ ನಾಯಕತ್ವವನ್ನು ಒತ್ತಾಯಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಕಿಸಾನ್ ಘಟಕದ ಜಿಲ್ಲಾ ಉಪಾಧ್ಯಕ್ಷ ಧನಪಾಲ್ ಮಾತನಾಡಿ, ಕೆ.ಎಂ. ಶಿವಲಿಂಗೇಗೌಡರಿಗೆ ಸಚಿವ ಸ್ಥಾನ ಹಾಗೂ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ,ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷರು, ಬಿ.ಕೆ. ಹರಿಪ್ರಸಾದ್ ಹಾಗೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರ ಗಮನಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದರು.
ಶಿವಲಿಂಗೇಗೌಡರು ನಿಗಮ ಮಂಡಳಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ನಂತರ ನಡೆದ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಾದ್ಯಂತ ಸಕ್ರಿಯವಾಗಿ ಸಂಚರಿಸಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರ ಗೆಲುವಿಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡಿದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಹಾಸನ ಜಿಲ್ಲೆಯ ಹೆಚ್ಚಿನ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲು ಅನುಕೂಲವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಾರ್ಯನಿರ್ವಹಿಸಿದರೆ ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿಯೂ ಕಾಂಗ್ರೆಸ್ ಉತ್ತಮ ಸಾಧನೆ ಮಾಡಲಿದೆ. ಈ ಬಾರಿ ಜಿಲ್ಲಾ ಪಂಚಾಯಿತಿಯಲ್ಲಿ ಸ್ವತಂತ್ರವಾಗಿ ಅಧಿಕಾರ ಪಡೆಯುವ ಅವಕಾಶವೂ ಪಕ್ಷಕ್ಕಿದೆ ಎಂದು ಅಭಿಪ್ರಾಯಪಟ್ಟರು.
ಜೂನ್ 18ರ ನಂತರ ಬೇಲೂರು ಕ್ಷೇತ್ರದ ಸುಮಾರು 50 ಮಂದಿ ಹಿರಿಯ ಕಾಂಗ್ರೆಸ್ ಮುಖಂಡರ ನಿಯೋಗವೊಂದು ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಡಾ. ಜಿ. ಪರಮೇಶ್ವರ್ ಸೇರಿದಂತೆ ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ಅವಕಾಶ ಕೋರಲಿದೆ ಎಂದು ತಿಳಿಸಿದರು.
ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಹಾಸನ ಜಿಲ್ಲೆಗೆ ಸೂಕ್ತ ಪ್ರಾತಿನಿಧ್ಯ ನೀಡಬೇಕು ಹಾಗೂ ಕೆ.ಎಂ. ಶಿವಲಿಂಗೇಗೌಡರನ್ನು ಸಚಿವರನ್ನಾಗಿ ನೇಮಿಸುವ ಮೂಲಕ ಪಕ್ಷ ಸಂಘಟನೆಗೆ ಮತ್ತಷ್ಟು ಬಲ ತುಂಬಬೇಕು ಎಂದು ಕಾಂಗ್ರೆಸ್ ಹೈಕಮಾಂಡ್ಗೆ ಮನವಿ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ರಮೇಶ್, ಅಸ್ಲಾಂ ಹಾಗೂ ಕಾಂಗ್ರೆಸ್ ಯುವ ಘಟಕದ ತಾಲೂಕು ಉಪಾಧ್ಯಕ್ಷ ರಾಕೇಶ್ ಉಪಸ್ಥಿತರಿದ್ದರು.
ಕೆ.ಎಂ. ಶಿವಲಿಂಗೇಗೌಡರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ನಾಯಕರಿಗೆ ಮನವಿ



