ಚಾಮರಾಜನಗರ: ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ನಗರದಲ್ಲಿಂದು ತಂಬಾಕು ಸೇವನೆಯಿಂದ ಉಂಟಾಗಬಹುದಾದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿತ್ತು.
ನಗರದ ಚಾಮರಾಜೇಶ್ವರ ದೇವಾಲಯದ ಮುಂಭಾಗದಿಂದ ಜಿಲ್ಲಾಡಳಿತ ಭವನದ ವರೆಗೆ ಏರ್ಪಡಿಸಲಾಗಿದ್ದ ಕಾಲ್ನಡಿಗೆ ಜಾಥಾ ಕರ್ಯಕ್ರಮವನ್ನು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಹಾಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಷ್ಟ್ರೀಯ ಬಾಯಿ ಆರೋಗ್ಯ ಕಾರ್ಯಕ್ರಮ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿತ್ತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಇತರೆ ಗಣ್ಯರು ಜಾಗೃತಿ ಜಾಥಾಗೆ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು.ಇದೇ ವೇಳೆ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ ಅವರು ತಂಬಾಕು ಸೇವನೆ ದುಷ್ಪರಿಣಾಮದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ತಂಬಾಕು ಸೇವನೆ ಹಾಗೂ ಮದ್ಯಪಾನ ಇನ್ನಿತರ ದುಶ್ಚಟದಿಂದ ಆರೋಗ್ಯದ ಮೇಲೆ ಉಂಟಾಗುವ ಗಂಭೀರ ಪರಿಣಾಮದ ಬಗ್ಗೆ ಅರಿವು ಮೂಡಿಸಬೇಕು. ಸಾರ್ವಜನಕರು ದುಶ್ಚಟಗಳಿಂದ ಹೊರಬಂದು ಕುಟುಂಬದ ಪೋಷಣೆ ಕಡೆ ಗಮನಹರಿಸಿ ಉತ್ತಮ ಜೀವನ ನಡೆಸುವಂತೆ ಮಾಡುವುದೇ ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೆದ ಅವರು ಮಾತನಾಡಿ ವಿಶ್ವಸಂಸ್ಥೆ ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು 1988 ಮೇ 31 ರಂದು ಮೊದಲ ಬಾರಿಗೆ ಆಚರಣೆಗೆ ತಂದಿತು. ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮದ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವು ಮೂಡಿಸಬೇಕು. ಮದ್ಯ ವಯಸ್ಕರಿಗೆ ಸೀಮಿತವಾಗಿದ್ದ ತಂಬಾಕು ಸೇವನೆಯಿಂದ ಪ್ರಸ್ತುತ ದಿನಗಳಲ್ಲಿ 13-14 ವರ್ಷದ ಮಕ್ಕಳು ಕೂಡ ಈ ಚಟಕ್ಕೆ ಒಳಗಾಗುತ್ತಿರುವುದು ಆಘಾತಕಾರಿ ವಿಷಯವಾಗಿದೆ. ಮಕ್ಕಳು ಬೇಗನೆ ದುಶ್ಚಟಗಳಿಗೆ ಒಳಗಾಗುತ್ತಿದ್ದಾರೆ. ಶಾಲೆ ಕಾಲೇಜಿನ ಮಕ್ಕಳಿಗೂ ಇದರ ಬಗ್ಗೆ ಅರಿವು ಮೂಡಿಸುವುದು ಉತ್ತಮ. ಈ ವರ್ಷದ ಘೋಷವಾಕ್ಯ ‘ತಂಬಾಕು ಉದ್ಯಮದ ಹಸ್ತಕ್ಷೇಪದಿಂದ ಮಕ್ಕಳನ್ನು ರಕ್ಷಿಸುವುದು’ ಎಂಬುದಾಗಿದೆ ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಗಳಾದ ಡಾ.ಚಿದಂಬರಂ ಮಾತನಾಡಿ ತಂಬಾಕಿನಲ್ಲಿರುವ ನಿಕೋಟಿನ್ ಅಂಶವು ಮತ್ತೆಮತ್ತೆ ತಂಬಾಕು ಬಳಸಲು ಜನರನ್ನು ಪ್ರೇರೆಪಿಸಲಿದೆ. ಪುರುಷರಲ್ಲಿ ತಂಬಾಕು ಸೇವನೆ ಸಾಮಾನ್ಯ. ಆದರೆ ಇತ್ತೀಚಿನ ದಿನಗಳಲ್ಲಿ ಹೆಣ್ಣುಮಕ್ಕಳು ಸಹ ತಂಬಾಕು ಸೇವನೆಯಂತಹ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ವಿಪರ್ಯಾಸ ಸಂಗತಿಯಾಗಿದೆ. ತಂಬಾಕು ಸೇವನೆಯ ದುಶ್ಚಟಗಳಿಂದಾಗುವ ನಿರಂತರ ಆರೋಗ್ಯದ ಸಮಸ್ಯೆಗಳ ಬಗ್ಗೆ ನಾಗರಿಕರಲ್ಲಿ ಅರಿವು ಮೂಡಿಸಿ ತಂಬಾಕು ಸೇವನೆಯನ್ನು ತಡೆಯುವುದೇ ಜಾಥಾದ ಉದ್ದೇಶ ಎಂದರು.
ಹೆಚ್ಚುವರಿ ಜಿಲ್ಲಾ ಸೆಷೆನ್ಸ್ ನ್ಯಾಯಾಧೀಶರಾದ ಎ. ಕೃಷ್ಣ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ರಾಜೇಶ್ಕುಮಾರ್, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ಮಂಜುನಾಥ್, ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಂಜುನಾಥ್ ಪ್ರಸನ್ನ. ತಾಲೂಕು ಆರೋಗ್ಯಾಧಿಕಾರಿ ಡಾ. ಶ್ರೀನಿವಾಸ್, ಆರೋಗ್ಯ ಶಿಕ್ಷಣ ಅಧಿಕಾರಿ ದೊರೆಸ್ವಾಮಿ ನಾಯಕ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಚೆಲುವರಾಜು, ತಂಬಾಕು ಸಲಹೆಗಾರರಾದ ಪ್ರಶಾಂತ್, ಸರ್ಕಾರಿ ನಸಿರ್ಂಗ್ ಶಾಲೆಯ ಬೋಧಕರಾದ ಗಂಗಮ್ಮ, ನಸಿರ್ಂಗ್ ಶಾಲೆಯ ವಿದ್ಯಾರ್ಥಿಗಳು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಇತರರು ಜಾಥಾದಲ್ಲಿ ಪಾಲ್ಗೊಂಡಿದ್ದರು.