ಚಿಕ್ಕಬಳ್ಳಾಪುರ: 2026ನೇ ಸಾಲಿನ ಮೊದಲ ಬೃಹತ್ ಲೋಕಾ ಅದಾಲತ್ ಕಾರ್ಯಕ್ರಮವನ್ನು ಇದೇ ಮಾರ್ಚ್ 14 ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಹಮ್ಮಿಕೊಂಡಿದ್ದು ಜಿಲ್ಲೆಯ ಸಾರ್ವಜನಿಕರು ಅದಾಲತ್ನಲ್ಲಿ ಭಾಗವಹಿಸಿ ತಮ್ಮ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳುವ ಮೂಲಕ ಸದುಪಯೋಗಪಡಿಸಿಕೊಳ್ಳಲು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಟಿ.ಪಿ.ರಾಮಲಿಂಗೇಗೌಡ ಅವರು ತಿಳಿಸಿದರು.
ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಆಯೋಜಿಸಿದ್ದ ರಾಷ್ಟ್ರೀಯ ಲೋಕ ಅದಾಲತ್ ಕುರಿತ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಜಿಲ್ಲೆಯ ನ್ಯಾಯಾಲಯಗಳಲ್ಲಿ 49000 ಕ್ಕೂ ಹೆಚ್ಚು ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಇವೆ ಇವುಗಳ ಪೈಕಿ ಈಗಾಗಲೆ ಲೋಕಾ ಅದಲತ್ ಗೆ ಈ ಬಾರಿ ತೆಗೆದುಕೊಳ್ಳಲು 12,222 ಪ್ರಕರಣಗಳುನ್ನು ಗುರುತಿಸಲಾಗಿದೆ ಮಾರ್ಚ್ 13ನೇ ತಾರೀಕಿನ ವರೆಗೆ ಇನ್ನೂ ಹೆಚ್ಚಿನ ಪ್ರಕರಣಗಳು ಅದಾಲತ್ ಗೆ ಬರುವ ನಿರೀಕ್ಷೆ ಇದೆ. ಒಟ್ಟಾರೆ ಮಾರ್ಚ್ 14ರ ಅದಾಲತ್ ನಲ್ಲಿ 12ಸಾವಿರ ಕ್ಕೂ ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥ ಪಡಿಸುವ ಗುರಿ ಇದ್ದು, ಜಿಲ್ಲೆಯ ನಾಗರೀಕರ ಸೇವೆಯನ್ನು ಪ್ರಕರಣಗಳ ತ್ವರಿತ ಇತ್ಯರ್ಥ ಮಾಡುವ ಮೂಲಕ ಮಾಡಲಾಗುವುದು. ಜಿಲ್ಲೆಯಲ್ಲಿ ಎಲ್ಲಿಯಾದರೂ, ಯಾವುದೇ ರೀತಿಯ ಸಮಸ್ಯೆಗಳು ಕಂಡುಬAದಲ್ಲಿ ಮಾಧ್ಯಮಗಳ ಪ್ರತಿನಿಧಿಗಳು ಬೆಳಕಿಗೆ ತನ್ನಿ, ಆಗ ಸಕ್ಷಮ ಪ್ರಾಧಿಕಾರಗಳು ಹಾಗೂ ಅಧಿಕಾರಿಗಳು ಪರಿಹರಿಸುವ ಪ್ರಯತ್ನ ಮಾಡಲಿದ್ದಾರೆ ಈ ಕುರಿತು ಸೂಚನೆಗಳನ್ನು ಸಹ ಈಗಾಗಲೇ ಜಿಲ್ಲಾಡಳಿತಕ್ಕೆ ನೀಡಲಾಗಿದೆ. ಒಂದು ವೇಳೆ ಸಕ್ಷಮ ಪ್ರಾಧಿಕಾರಗಳು ಸಾರ್ವಜನಿಕರ ಕುಂದು ಕೊರತೆಗಳನ್ನು, ಅಹವಾಲುಗಳಿಗೆ ಸ್ಪಂದಿಸದೆ ಇದ್ದರೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವನ್ನು ಸಂಪರ್ಕಿಸಿ ಮಾಹಿತಿ ನೀಡಲು ಮಾಧ್ಯಮ ಪ್ರತಿನಿಧಿಗಳಲ್ಲಿ ನ್ಯಾಯಾಧೀಶರು ಮನವಿ ಮಾಡಿದರು.
ನೇರವಾಗಿ ಸಕ್ಷಮ ಪ್ರಾಧಿಕಾರಗಳನ್ನು ಸಂಪರ್ಕಿಸಿ
ಯಾವುದೇ ಸಾರ್ವಜನಿಕರು ಯಾವುದೇ ರೀತಿಯ ಕುಂದು ಕೊರತೆಗಳನ್ನು, ಅಹವಾಲುಗಳನ್ನು , ಸಮಸ್ಯೆಗಳನ್ನು ಸಂಬAಧ ಪಟ್ಟ ಸಕ್ಷಮ ಪ್ರಾಧಿಕಾರಗಳನ್ನು ಹಾಗೂ ಆ ಪ್ರಾಧಿಕಾರಗಳ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಸಂಪರ್ಕಿಸಿ ಪರಿಹರಿಸಿಕೊಳ್ಳುವ ಪ್ರಯತ್ನ ವನ್ನು ಮೊದಲಿಗೆ ಮಾಡಬೇಕು ಅಲ್ಲಿ ಪರಿಹಾರ ಅಥವಾ ವಿಲೇವಾರಿ ಆಗದೇ ಇದ್ದಪಕ್ಷದಲ್ಲಿ ಜಿಲ್ಲೆಯ ನ್ಯಾಯಾಲಯಗಳಲ್ಲಿನ ಮಧ್ಯಸ್ಥಿಕೆ ಕೇಂದ್ರಗಳು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಪರಿಹರಿಸಿಕೊಳ್ಳಲು ಪ್ರಯತ್ನಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮೂಲಕ ನಿರಂತರವಾಗಿ ರಾಜಿ ಪಂಚಾಯಿತಿ ಮೂಲಕ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯಗಳಲ್ಲಿ ಬಾಕಿ ಇರುವ ರಾಜಿಯಾಗಬಲ್ಲ ಪ್ರಕರಣಗಳನ್ನು ಇತ್ಯರ್ಥಪಡಿಸುತ್ತಾ ಬರಲಾಗುತ್ತಿದೆ, ಈ ಬಾರಿಯ ಮಾರ್ಚ್ 14ರ ಅದಾಲತ್ನಲ್ಲಿ ಜಿಲ್ಲಾ ನ್ಯಾಯಾಲಯವೂ ಸೇರಿದಂತೆ ಜಿಲ್ಲೆಯ ತಾಲ್ಲೂಕು ಹಂತದ ನ್ಯಾಯಾಲಯಗಳಲ್ಲಿ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬAಧಿಸಿದ ಕ್ಷೇಮುಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ಪ್ರಕರಣಗಳು, ವಿಚ್ಛೇಧನವನ್ನು ಹೊರತುಪಡಿಸಿ ವೈವಾಹಿಕ ಕುಟುಂಬ ನ್ಯಾಯಾಲಯದ ಪ್ರಕರಣಗಳನ್ನು ಕಕ್ಷಿದಾರರು ಹಾಗೂ ವಕೀಲರ ಸಹಕಾರದೊಂದಿಗೆ ಇತ್ಯರ್ಥಪಡಿಸಲಾಗುವುದುಜೊತೆಗೆ ಚೆಕ್ಕು ಅಮಾನ್ಯ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧಿಕರಣದ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಕಾರ್ಮಿಕರ ವಿವಾದಗಳು, ಭೂಸ್ವಾಧೀನ ಪ್ರಕರಣಗಳು ಹಾಗೂ ವೇತನ ಮತ್ತು ಭತ್ಯೆಗಳಿಗೆ ಸಂಬAಧಿಸಿದ ಸೇವಾ ಪ್ರಕರಣಗಳು ಹಾಗೂ ಸಿವಿಲ್ ಪಿಂಚಣಿ ಪ್ರಕರಣಗಳನ್ನು ರಾಜಿ ಮೂಲಕ ಇಬ್ಬರೂ ಕಕ್ಷಿದಾರರ ಮನವೊಲಿಸಿ ಇತ್ಯರ್ಥ ಪಡಿಸಲಾಗುವುದು. ಜೊತೆಗೆ ರಾಜಿಯಾಗಬಲ್ಲ ಸಿವಿಲ್ ಹಾಗೂ ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳನ್ನೂ ಇತ್ಯರ್ಥ ಪಡಿಸಲಾಗುವುದು. ನ್ಯಾಯಾಲಯಗಳಲ್ಲಿನ ಪ್ರಕರಣಗಳನ್ನು ಉಭಯ ಕಕ್ಷಿದಾರರು ರಾಜಿ ಮಾಡಿಕೊಳ್ಳಲು ಸೂಕ್ತ ಕಾನೂನು ಸಲಹೆ ಮತ್ತು ಮಾರ್ಗದರ್ಶನವನ್ನು ನೀಡಲಾಗುವುದು ಎಂದರು.
ಲೋಕ ಅದಾಲತ್ ನಲ್ಲಿ ಪ್ರಕರಣಗಳನ್ನು ಸ್ವಯಂ ಪ್ರೇರಿತರಾಗಿ ಇತ್ಯರ್ಥಪಡಿಸಿಕೊಳ್ಳಲು ಎರಡೂ ಕಡೆಯವರಿಗೂ ಒಪ್ಪಿಗೆಯಾಗುವಂತೆ ಪ್ರಕರಣ ತೀರ್ಮಾನವಾಗುವುದರಿಂದ ಇಬ್ಬರನಡುವಿನ ಬಾಂಧವ್ಯ ಉಳಿದು ವಿವಾದವು ಸುಖಾಂತ್ಯಗೊಳ್ಳುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ವ್ಯಾಜ್ಯ ಪೂರ್ವ ಪ್ರಕರಣಗಳನ್ನೂ ಸಹ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶವಿರುತ್ತದೆ. ಸಂಧಾನಕಾರರು ಸೂಚಿಸುವ ಪರಿಹಾರ ಸಮ್ಮತಿಯಾದಲ್ಲಿ ಮಾತ್ರ ರಾಜಿ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಲೋಕ ಅದಾಲತ್ ವಿಶೇಷ ಅವಕಾಶವಾಗಿರುತ್ತದೆ ಎಂದರು.ಲೋಕ ಅದಾಲತ್ ನಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವುದರಿಂದ ಪದೇ ಪದೇ ನ್ಯಾಯಾಲಯಕ್ಕೆ ಅಲೆಯುವುದು ತಪ್ಪುತ್ತದೆ. ಕಕ್ಷಿದಾರರ ಸಮಯ ಮತ್ತು ಹಣ ಉಳಿತಾಯವಾಗಿ ಇಬ್ಬರಿಗೂ ನ್ಯಾಯ ದೊರೆತಂತಾಗಿ ನೆಮ್ಮದಿಯೂ ದೊರೆಯುತ್ತದೆ. ಅಲ್ಲದೇ ನ್ಯಾಯಾಲಯದ ಅಮೂಲ್ಯ ಸಮಯವೂ ಉಳಿತಾಯವಾಗಿ ಆ ಸಮಯವನ್ನು ಬಾಕಿ ಇರುವ ಇತರೆ ಪ್ರಕರಣಗಳ ವಿಚಾರಣೆ ಮತ್ತು ಇತ್ಯರ್ಥಕ್ಕೆ ನೀಡಲು ಸಹಕಾರಿಯಾಗುತ್ತದೆ. ರಾಜಿ ಮೂಲಕ ಇತ್ಯರ್ಥಪಡಿಸಿಕೊಳ್ಳುವುದರಿಂದ ಕಕ್ಷಿದಾರರ ನಡುವಿನ ವೈಮನ್ಯಸ್ಸು,ಭಿನ್ನಾಭಿಪ್ರಾಯ, ದ್ವೇಷ ಕಡಿಮೆಯಾಗಿ ಇಬ್ಬರ ನಡುವೆ ಸಾಮರಸ್ಯ, ಸೌಹಾರ್ದತೆಯ ವಾತಾವರಣ ನಿರ್ಮಾಣವಾಗಿ ಸಮಾಜದಲ್ಲಿ ಶಾಂತಿ ನೆಮ್ಮದಿಯೂ ನಿರ್ಮಾಣವಾಗುತ್ತದೆ ಎಂದರು. ಮಾರ್ಚ್ 14 ರ ಅದಾಲತ್ ನಲ್ಲಿ ಪಾಲ್ಗೊಳ್ಳಲು ಇಚ್ಚಿಸುವ ಸಾರ್ವಜನಿಕರು ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕುಗಳ ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.ಈ ವೇಳೆ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಿಲ್ಪ ರವರು ಉಪಸ್ಥಿತರಿದ್ದರು.
ಮಾರ್ಚ್ 14 ಕ್ಕೆ ಬೃಹತ್ ಲೋಕಾ ಅದಾಲತ್: ನ್ಯಾ.ಟಿ.ಪಿ.ರಾಮಲಿಂಗೇಗೌಡ



