ಚಿಕ್ಕಮಗಳೂರು: ನಗರದ ರಾಂಪುರ ಗ್ರಾಮದಲ್ಲಿ ಕಾಮಗಾರಿ ವೀಕ್ಷಣೆಗೆ ಬಂದಿದ್ದ ಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಗೋಬ್ಯಾಕ್ ಘೋಷಣೆ ಕೂಗಿದ ಪರಿಣಾಮ, ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ನಡುವೆ ಕೈ ಕೈ ಮಿಲಾಯಿಸುವ ಹಂತಕ್ಕೆ ಕಿತ್ತಾಟ ನಡೆದಿತ್ತು. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಸದ್ಯ ಈ ಪ್ರಕರಣ ಭಾರಿ ಚರ್ಚೆಗೆ ಕಾರಣವಾಗಿದ್ದು, ಸಿ,ಟಿ ರವಿ ಈ ಭಾಗದಲ್ಲಿ ಹೆಚ್ಚಿನ ಅಭಿವೃದ್ಧಿಗೆ ಕಾರಣ ನಾನೇ, ಯಾವ ದೇವಸ್ಥಾನಕ್ಕೆ ಬೇಕಾದರೂ ಬಂದು ಪ್ರಮಾಣ ಮಾಡುತ್ತೇನೆ ಎಂದು ಹೇಳಿದ್ದಾರೆ.ಕಾಮಗಾರಿ ಕ್ರೆಡಿಟ್ ವಿಚಾರವಾಗಿ ಶಾಸಕ ತಮ್ಮಯ್ಯ ವಿರುದ್ಧ ಸಿ.ಟಿ. ರವಿ ಆಕ್ರೋಶ ಹೊರಹಾಕಿದ್ದು, ಮುಖಾಮುಖಿ ಆಣೆ ಪ್ರಮಾಣಕ್ಕೆ ಸವಾಲು ಹಾಕಿದ್ದಾರೆ. ಈ ಭಾಗದಲ್ಲಿ ನಡೆಯುತ್ತಿರುವ ಶೇ 95ರಷ್ಟು ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನವನ್ನು ತಂದಿದ್ದು ನಾನೇ. ಕಾಂಗ್ರೆಸ್ ಸರ್ಕಾರ ಈ ರಸ್ತೆ ಕಾಮಗಾರಿಗೆ ಒಂದು ಪೈಸೆ ಹಣವನ್ನೂ ನೀಡಿಲ್ಲ.



