ಚಿಕ್ಕಬಳ್ಳಾಪುರ: ಜಿಲ್ಲೆಯಾದ್ಯಂತ ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್ಎಚ್ಎಂ) ವ್ಯಾಪ್ತಿಯ ವಿವಿಧ ಆರೋಗ್ಯ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಆರೋಗ್ಯ ಸೇವೆಗಳನ್ನು ಜನಸಾಮಾನ್ಯರಿಗೆ ಇನ್ನಷ್ಟು ಪರಿಣಾಮಕಾರಿಯಾಗಿ ತಲುಪಿಸಬೇಕು ಎಂದು ಜಿಲ್ಲಾಧಿಕಾರಿ ಜಿ. ಪ್ರಭು ಅವರು ಅಧಿಕಾರಿಗಳಿಗೆ ಸೂಚಿಸಿದರು.ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಕುಟುಂಬ ಕಲ್ಯಾಣ, ಕ್ಷಯರೋಗ ನಿರ್ಮೂಲನೆ, ಏಡ್ಸ್ ನಿಯಂತ್ರಣ, ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ, ದಡಾರ-ರುಬೆಲ್ಲಾ ನಿರ್ಮೂಲನೆ, ತಂಬಾಕು ನಿಯಂತ್ರಣ ಹಾಗೂ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಪ್ರಗತಿಯನ್ನು
ಇಲಾಖೆವಾರು ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಗುರಿ ಸಾಧನೆಗೆ ಎಲ್ಲ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವಂತೆ ನಿರ್ದೇಶನ ನೀಡಿದರು.ಕುಟುಂಬ ಕಲ್ಯಾಣ ಕಾರ್ಯಕ್ರಮದಡಿ ಮಹಿಳೆಯರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಸ್ತ್ರೀರೋಗ ತಜ್ಞರಿಗೆ ಎಲ್.ಟಿ.ಓ. (ಲ್ಯಾಪರೋಸ್ಕೋಪಿಕ್ ಟ್ಯೂಬೆಕ್ಟಮಿ ಆಪರೇಷನ್) ಶಸ್ತ್ರಚಿಕಿತ್ಸೆ ನಡೆಸುವ ಕುರಿತು ರಾಜ್ಯ ಮಟ್ಟದಲ್ಲಿ ಪುನರ್ಮನನ ತರಬೇತಿ ಪಡೆಯಬೇಕು, ತರಬೇತಿಯ ಮೂಲಕ ವೈದ್ಯರು ತಮ್ಮ ಕೌಶಲ್ಯವನ್ನು ಇನ್ನಷ್ಟ್ಟು ವೃದ್ಧಿಸಿಕೊಳ್ಳುವುದರೊಂದಿಗೆ ಮಹಿಳೆಯರಿಗೆ ಸುರಕ್ಷಿತ ಹಾಗೂ ಗುಣಮಟ್ಟದ ಚಿಕಿತ್ಸೆಯನ್ನು ಒದಗಿಸಲು ಸಾಧ್ಯವಾಗಲಿದೆ ಎಂದು ಹೇಳಿದರು.ಕ್ಷಯರೋಗ ನಿರ್ಮೂಲನೆ ಹಾಗೂ ಏಡ್ಸ್ ನಿಯಂತ್ರಣ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಡಿ ನಡೆಯುತ್ತಿರುವ 100 ದಿನಗಳ ಟಿ.ಬಿ. ಮುಕ್ತ ಅಭಿಯಾನವನ್ನು ಯಶಸ್ವಿಯಾಗಿ ಅನುಷ್ಟಾನಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಟಿ.ಬಿ. ರೋಗಿಗಳನ್ನು ಶೀಘ್ರ ಪತ್ತೆಹಚ್ಚಿ ಚಿಕಿತ್ಸೆ ನೀಡುವುದರ ಜೊತೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೂ ಹೆಚ್ಚಿನ ಆದ್ಯತೆ ನೀಡಬೇಕು. ಅದೇ ರೀತಿ ಮಿಷನ್ ಏಡ್ಸ್ ಸುರಕ್ಷಾ ಅಭಿಯಾನವನ್ನು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಪರಿಣಾಮಕಾರಿಯಾಗಿ ನಡೆಸಿ, ಏಡ್ಸ್ ತಡೆಗಟ್ಟುವಿಕೆ ಹಾಗೂ ಸೋಂಕಿನ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ವ್ಯಾಪಕವಾಗಿ ಹಮ್ಮಿಕೊಳ್ಳುವಂತೆ ನಿರ್ದೇಶನ ನೀಡಿದರು.ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ ಮತ್ತು ಎಂ.ಆರ್. (ದಡಾರ-ರುಬೆಲ್ಲಾ) ಎಲಿಮಿನೇಶನ್ ಕಾರ್ಯಕ್ರಮದ ಭಾಗವಾಗಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಹೆಚ್.ಪಿ.ವಿ. ಲಸಿಕೆಯ ಮಹತ್ವದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಜಿಲ್ಲೆಯ ಎಲ್ಲ ಸರ್ಕಾರಿ ಹಾಗೂ ಖಾಸಗಿ ಆರೋಗ್ಯ ಸಂಸ್ಥೆಗಳ ಜೊತೆಗೆ ಶಾಲೆಗಳಲ್ಲಿಯೂ ದಡಾರ ಹಾಗೂ ರುಬೆಲ್ಲಾ ರೋಗಗಳ ಲಕ್ಷಣಗಳು, ತಡೆಗಟ್ಟುವಿಕೆ ಮತ್ತು ಲಸಿಕಾಕರಣದ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಾದ್ಯಂತ ಕೋಟ್ಪಾ ಕಾಯ್ದೆಯ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಒತ್ತು ನೀಡಬೇಕು, ಎಲ್ಲಾ ಇಲಾಖೆಗಳ ಸಮನ್ವಯದೊಂದಿಗೆ ಹೆಚ್ಚಿನ ಪ್ರಮಾಣದಲ್ಲಿ ದಾಳಿಗಳನ್ನು ನಡೆಸುವಂತೆ ಸೂಚಿಸಿದರು.ವಿಶೇಷವಾಗಿ ಶಾಲೆಗಳು, ಕಾಲೇಜುಗಳು, ಆಸ್ಪತ್ರೆಗಳು, ಪ್ರವಾಸಿ ತಾಣಗಳು ಹಾಗೂ ದೇವಸ್ಥಾನಗಳ 200 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಬಳಕೆಯನ್ನು ತಡೆಗಟ್ಟಲು ನಿರಂತರ ಕೋಟ್ಪಾ ದಾಳಿಗಳನ್ನು ಹಮ್ಮಿಕೊಳ್ಳಬೇಕು ಎಂದು ಹೇಳಿದರು.ಪ್ರಸಕ್ತ ಸಾಲಿನ ಏಪ್ರಿಲ್ನಿಂದ ಜೂನ್-2026ರವರೆಗೆ ಜಿಲ್ಲೆಯಲ್ಲಿ 71 ಕೋಟ್ಪಾ ದಾಳಿಗಳನ್ನು ನಡೆಸಿ 882 ಪ್ರಕರಣಗಳನ್ನು ದಾಖಲಿಸಿರುವುದನ್ನು ಸಭೆಯಲ್ಲಿ ಪರಿಶೀಲಿಸಿದ ಅವರು, ಮುಂದಿನ ದಿನಗಳಲ್ಲಿ ಶಾಲಾ-ಕಾಲೇಜುಗಳ ಸುತ್ತಮುತ್ತ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಾಯ್ದೆ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ದಂಡ ವಿಧಿಸಬೇಕು ಎಂದು ಸೂಚಿಸಿದರು.
ಪೊಲೀಸ್ ಇಲಾಖೆ ಹಾಗೂ ಆರೋಗ್ಯ ಇಲಾಖೆ ಜಂಟಿಯಾಗಿ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಲ್ಲಿ ತಂಬಾಕು ಮತ್ತು ಮಾದಕ ವ್ಯಸನದ ದುಷ್ಪಾರಿಣಾಮಗಳ ಕುರಿತು ವ್ಯಾಪಕ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಅವರು ನಿರ್ದೇಶನ ನೀಡಿದರು.ಡೆಂಗ್ಯೂ, ಮಲೇರಿಯಾ ತಡೆಗೆ ಸಮನ್ವಯ ಅಗತ್ಯ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಡೆಂಗ್ಯೂ ಮತ್ತು ಮಲೇರಿಯಾ ನಿಯಂತ್ರಣಕ್ಕೆ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮೇ 16ರಂದು ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಹಾಗೂ ಜುಲೈ ತಿಂಗಳ ಡೆಂಗ್ಯೂ ವಿರೋಧಿ ಮಾಸಾಚರಣೆಯ ಅಂಗವಾಗಿ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಗಳನ್ನು ನಿಯಮಿತವಾಗಿ ನಡೆಸಿ, ಸಾರ್ವಜನಿಕರಲ್ಲಿ ಡೆಂಗ್ಯೂ ಮತ್ತು ಮಲೇರಿಯಾ ತಡೆ ಕುರಿತು ವ್ಯಾಪಕ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು.ಮನೆ ಹಾಗೂ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳುವುದು, ಸೊಳ್ಳೆಗಳ ಉತ್ಪತ್ತಿ ತಡೆಯುವುದು ಸೇರಿದಂತೆ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಜನರಿಗೆ ನಿರಂತರ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅತಿಕ್ ಪಾಷಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ್ ಕುಮಾರ್, ವಿವಿಧ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಜಿಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು, ಜಿಲ್ಲಾ ಶುಶ್ರೂಷಣಾಧಿಕಾರಿಗಳು, ತಾಲ್ಲೂಕು ಆರೋಗ್ಯಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಎನ್ಎಚ್ಎಂ ಕಾರ್ಯಕ್ರಮ ಪರಿಣಾಮಕಾರಿ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಪ್ರಭು ಸೂಚನೆ



