ದಾವಣಗೆರೆ: ಎಸ್.ಎಸ್.ಎಲ್.ಸಿ ಪರೀಕ್ಷೆ ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ನಡೆಯಲಿದ್ದು, ಸುಗಮ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಕ್ರಮವಹಿಸಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷಾ ತಯಾರಿಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಸೂಚಿಸಿದರು.ಜಿಲ್ಲಾಧಿಕಾರಿ ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ್, ಶಾಲಾ ಶಿಕ್ಷಣ ಇಲಾಖಾ ವತಿಯಿಂದಎಸ್.ಎಸ್.ಎಲ್.ಸಿ ಪರೀಕ್ಷಾ ಸಿದ್ದತೆ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಈ ಬಾರಿ ಎಸ್.ಎಸ್.ಎಲ್.ಸಿ ಸೇರಿದಂತೆ ಶೈಕ್ಷಣಿಕ ಪ್ರಗತಿ ಫಲಿತಾಂಶವನ್ನು ಉತ್ತಮಪಡಿಸಲು ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಹಿಂದೆ 209 ಶಾಲೆಗಳು ಹಿಂದುಳಿದಿದ್ದವು, ಆದರೆ ಶಿಕ್ಷಕರ ಶ್ರಮದಿಂದ ಈ ಸಂಖ್ಯೆ ಈಗ 39ಕ್ಕೆ ಇಳಿದಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಈ ಸಂಖ್ಯೆಯು ಇನ್ನು ಕಡಿಮೆ ಆಗಲು ಕ್ರಮವಹಿಸಬೇಕು, ವಿದ್ಯಾರ್ಥಿಗಳಿಗೆ ಕೇವಲ 13 ಅಂಕಗಳನ್ನು ಪಡೆಯುವಂತೆ ಸಿದ್ಧತೆ ಮಾಡುವುದು ಕಷ್ಟದ ಕೆಲಸವಲ್ಲ. ಆಂತರಿಕ ಅಂಕಗಳ ಜೊತೆಗೆ ಈ ಕನಿಷ್ಠ ಅಂಕಗಳನ್ನು ಗಳಿಸಲು ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡಬೇಕು , ಜಿಲ್ಲೆಯಲ್ಲಿ ಈ ಹಿಂದಿನಂತೆ ಯಾವುದೇ ಗೊಂದಲಗಳಿಲ್ಲದೆ, ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಸೂಚಿಸಲಾಗಿದೆ ಎಂದರು.ಪ್ರಶ್ನೆಪತ್ರಿಕೆ ಸೋರಿಕೆ ಅಥವಾ ನಕಲು ತಡೆಯಲು ಜೆರಾಕ್ಸ್ ಅಂಗಡಿ ಮತ್ತು ತರಬೇತಿ ಕೇಂದ್ರಗಳ ಮೇಲೆ ನಿಗಾ ಇಡಲಾಗಿದೆ, ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲು ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷೆ ನಡೆಯುವ ಕೊಠಡಿಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸಲಾಗಿದೆ, ಪರೀಕ್ಷೆ ನಡೆಯುವ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಬೆಸ್ಕಾಂ ಕ್ರಮವಹಿಸಬೇಕು. ಮತ್ತು ಆರೋಗ್ಯ ಇಲಾಖೆಯು ಪರೀಕ್ಷಾ ಕೇಂದ್ರಗಳಿಗೆ ಶೂಶ್ರಕರನ್ನು ನಿಯೋಜಿಸುವಂತೆ ಸೂಚಿಸಿದರು.ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳಿಗೆ ಬಿಸಿಯೂಟದ ವ್ಯವಸ್ಥೆಯಲ್ಲಿ ಇಂಧನ ಪೂರೈಕೆಯಲ್ಲಿ ಕೊರತೆಯಾಗದಂತೆ ನೋಡಿಕೊಳ್ಳಲು ಆಹಾರ ಇಲಾಖೆಗೆ ಸೂಚನೆ ನೀಡಲಾಗಿದೆ. ನಕಲಿ ದಾಖಲೆಗಳನ್ನು ನೀಡಿ ದಾಖಲಾತಿ ಮಾಡಿಕೊಳ್ಳುವುದನ್ನು ನಿಲ್ಲಿಸಬೇಕು. ಪರೀಕ್ಷಾ ಅಕ್ರಮಗಳಿಗೆ ಶಾಲೆಗಳು ಅವಕಾಶ ಕಲ್ಪಿಸದಂತೆ ಕ್ರಮವಹಿಸಬೇಕು, ಜೆರಾಕ್ಸ್ ಸೆಂಟರ್ ಗಳು ಪರೀಕ್ಷಾ ದಿನ ಮುಚ್ಚಲು ಸೂಚಿಸಲಾಗಿದೆ, ಪೋಷಕರಿಗೆ ವ್ಯವಸ್ಥೆಯ ಮೇಲೆ ಭರವಸೆ ಮೂಡಿಸುವುದು ನಮ್ಮ ಕರ್ತವ್ಯ. ಯಾವುದೇ ಅಕ್ರಮಗಳಿಗೆ ಅವಕಾಶ ನೀಡದೆ, ವಿದ್ಯಾರ್ಥಿಗಳಿಗೆ ಪೂರಕವಾದ ವಾತಾವರಣ ನಿರ್ಮಿಸಬೇಕು ಎಂದು ತಿಳಿಸಿದರು. ಜಿಲ್ಲೆಯಲ್ಲಿರುವ ಎಲ್ಲಾ 81 ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಬೆಂಗಳೂರಿನ ಆಯುಕ್ತರ ಕಚೇರಿ ಹಾಗೂ ಜಿಲ್ಲಾ ಮಟ್ಟದ ಸ್ಮಾರ್ಟ್ ಸಿಟಿ ಕೇಂದ್ರದಿAದ ನೇರ ನಿಗಾ ವಹಿಸಲಾಗುತ್ತದೆ. ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿಕೊಳ್ಳಬೇಕು, ವಿದ್ಯಾರ್ಥಿಗಳಿಗೆ ಕುಡಿಯುವ ನೀರು ಸರಬರಾಜು ಮಾಡಲು ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡಬೇಕು, ಜಿಲ್ಲೆಯಲ್ಲಿ ಯಾವುದೇ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪರೀಕ್ಷಾ ಕೇಂದ್ರಗಳು ಇರುವುದಿಲ್ಲ ಎಂದರು. ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೊಟ್ರೇಶ್ ಮಾತನಾಡಿ, ಮಾರ್ಚ್ 18 ರಂದು ಪ್ರಥಮ ಭಾಷೆ, ಮಾರ್ಚ್ 23 ರಂದು ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ, ಮಾರ್ಚ್ 25 ದ್ವಿತೀಯ ಭಾಷೆ, ಮಾರ್ಚ್ 28 ರಂದು ಗಣಿತ ಮತ್ತು ಸಮಾಜಶಾಸ್ತ್ರ, ಮಾರ್ಚ್ 30 ರಂದು ತೃತೀಯ ಭಾಷೆ, ಎನ್.ಎಸ್.ಕ್ಯೂ, ಎಫ್ ಏಪ್ರಿಲ್ 1 ರಂದು ಜೆ.ಟಿ.ಎಸ್ ವಿಷಯಗಳು ಮತ್ತು ಏಪ್ರಿಲ್ 2 ರಂದು ಸಮಾಜ ವಿಜ್ಞಾನ ಪರೀಕ್ಷೆಗಳು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.15 ರವರೆಗೆ ಪರೀಕ್ಷೆಗಳು ನಡೆಯಲಿವೆ, ಜಿಲ್ಲೆಯ 476 ಶಾಲೆಗಳಿಂದ ಚನ್ನಗಿರಿ ತಾಲ್ಲೂಕುನಲ್ಲಿ 3867 ವಿದ್ಯಾರ್ಥಿಗಳು, ದಾವಣಗೆರೆ ಉತ್ತರ 3746 ವಿದ್ಯಾರ್ಥಿಗಳು, ದಾವಣಗೆರೆ ದಕ್ಷಿಣ 5737 ವಿದ್ಯಾರ್ಥಿಗಳು, ಹರಿಹರ 3186 ವಿದ್ಯಾರ್ಥಿಗಳು, ಹೊನ್ನಾಳಿ 2829 ವಿದ್ಯಾರ್ಥಿಗಳು ಹಾಗೂ ಜಗಳೂರು ತಾಲ್ಲೂಕಿನಲ್ಲಿ 2400 ವಿದ್ಯಾರ್ಥಿಗಳು ಹೀಗೆ ಒಟ್ಟು 21765 ವಿದ್ಯಾರ್ಥಿಗಳು ಪರೀಕ್ಷೆ ನೋಂದಣಿಯಾಗಿರುತ್ತಾರೆ ,ಒಟ್ಟು 81 ಪರೀಕ್ಷಾ ಕೇಂದ್ರಗಳು ಮತ್ತು 31 ಪರೀಕ್ಷಾ ಕೇಂದ್ರಗಳ ಮಾರ್ಗಗಳ ಸಂಖ್ಯೆ ಇವೆ ಎಂದು ಸಭೆಗೆ ಮಾಹಿತಿಯನ್ನು ನೀಡಿದರು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಪರೀಕ್ಷೆಗೆ ಬರುವ ವಿದ್ಯಾರ್ಥಿಗಳು ತಮ್ಮ ಪ್ರವೇಶ ಪತ್ರ ವನ್ನು ತೋರಿಸಿ ಕೆ.ಎಸ್.ಆರ್.ಟಿ.ಸಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಬಸ್ ವಿಳಂಬವಾಗುವ ಸಾಧ್ಯತೆ ಇರುವುದರಿಂದ, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ನಿಗದಿತ ಸಮಯಕ್ಕಿಂತ ಅರ್ಧ ಗಂಟೆ ಮುಂಚಿತವಾಗಿ ತಲುಪುವಂತೆ ಶಾಲಾ ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವಂತೆ ಸೂಚಿಸಲಾಗಿದೆ ಎಂದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಹೆಚ್.ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠಲ್ ರಾವ್, ಶಾಲಾ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕಿ ಹನುಮಕ್ಕ, ಡಯಟ್ ಉಪ ನಿರ್ದೇಶಕಿ ಗೀತಾ , ಶಿಕ್ಷಾಣಾಧಿಕಾರಿ ಸಿದ್ದಪ್ಪ ಮತ್ತು ಇತರರು ಉಪಸ್ಥಿತರಿದ್ದರು.
ಪರೀಕ್ಷಾ ತಯಾರಿಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರ ವಹಿಸಿ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ



