ನವಲಗುಂದ : ಶ್ರೀ ಗುರುಶಾಂತೇಶ್ವರ ಸರಕಾರಿ ಪ್ರೌಢಶಾಲೆ, ಶಲವಡಿಯಲ್ಲಿ ಧಾರವಾಡ ಜಿಲ್ಲೆಯ ಎಲ್ಲ ತಾಲ್ಲೂಕಿನ ೧೪ ಹಾಗೂ ೧೭ ವರ್ಷದೊಳಗಿನ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕಬಡ್ಡಿ ಕ್ರೀಡಾಕೂಟ ಜರುಗಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಮತಾಜಬೇಗಂ ಎಚ್. ಯಾವಗಲ್ ಅವರು ವಿದ್ಯಾರ್ಥಿಗಳಿಂದ ಪ್ರಾರ್ಥನೆ ಹಾಗೂ ನಾಡಗೀತೆಯೊಂದಿಗೆ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ೯ನೇ ತರಗತಿಯ ವಿದ್ಯಾರ್ಥಿನಿ ಅನುಶ್ರೀ ಪತ್ತಾರ ಭರತನಾಟ್ಯವನ್ನು ಪ್ರಸ್ತುತಪಡಿಸಿ ಗಮನ ಸೆಳೆದರು.
ಶಲವಡಿ ವಿರಕ್ತಮಠ ಗುರುಶಾಂತೇಶ್ವರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದರು.ಕ್ಷೇತ್ರಶಿಕ್ಷಣಾಧಿಕಾರಿ ಎಸ್.ಬಿ. ಮಲ್ಲಾಡ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ವಿಷ್ಣು ನಾರಾಯಣ ಹೆಬ್ಬಾರ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಆರ್.ಎಚ್.ನೇಗಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಶಾಲೆಯ ಮುಖ್ಯೋಪಾಧ್ಯಾಯ ಹಾಗೂ ನವಲಗುಂದ ತಾಲ್ಲೂಕಿನ ದೈಹಿಕ ಶಿಕ್ಷಣ ಪರಿವೀಕ್ಷಕ ಎನ್.ವಿ. ಕುರುವತ್ತಿಮಠ ಸ್ವಾಗತಿಸಿದರು. ಒಲಂಪಿಕ್ ಧ್ವಜಾರೋಹಣವನ್ನು ಎಸ್ಡಿಎಂಸಿ ಕಾರ್ಯಾಧ್ಯಕ್ಷ ಉಮೇಶ ಶಿರೋಳ ನೆರವೇರಿಸಿದರು. ದೈಹಿಕ ಶಿಕ್ಷಕ ಆರ್.ಎಸ್. ಕೋರಿಮಠ ಕ್ರೀಡಾಪಟುಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ೨೮ ತಂಡಗಳಲ್ಲಿ ಕ್ರೀಡಾಪಟುಗಳು ಭಾಗವಹಿಸಿ ತಮ್ಮ ಬಲಾಬಲವನ್ನು ಪ್ರದರ್ಶಿಸಿದರು.