ನವದೆಹಲಿ: ಜಮ್ಮು ಮತ್ತು ಕಾಶ್ಮೀರವು ಭಾರತದ ಅವಿಭಾಜ್ಯ ಅಂಗವಾಗಿತ್ತು, ಅಂಗವಾಗಿದೆ, ಯಾವಗಲೂ ಅವಿಭಾಜ್ಯ ಅಂಗವಾಗಿಯೇ ಉಳಿಯುತ್ತದೆ ಎಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತ ಪ್ರತಿಪಾದಿಸಿದೆ.
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನ ತರಾಟೆಗೆ ತೆಗೆದುಕೊಂಡ ಭಾರತ, ಪಾಕಿಸ್ತಾನದ ತಪ್ಪು ಉಲ್ಲೇಖಗಳನ್ನ ಎತ್ತಿ ತೋರಿಸಿದೆ. ತನ್ನ ರಾಜಕೀಯ ಅಜೆಂಡಾಗಳಿಗಾಗಿ ಪಾಕಿಸ್ತಾನವು ವಿಶ್ವಸಂಸ್ಥೆ ವೇದಿಕೆಯನ್ನ ದುರ್ಬಳಕೆ ಮಾಡಿಕೊಳ್ಳುತ್ತಿದೆ, ಭಾರತದ ಆಂತರಿಕ ವಿಷಯಗಳ ಬಗ್ಗೆ ದಾರಿ ತಪ್ಪಿಸುತ್ತಿದೆ ಎಂದು ಆರೋಪಿಸಿದೆ. ಭದ್ರತಾ ಮಂಡಳಿಯ ವಾರ್ಷಿಕ ವರದಿ ಕುರಿತಾದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಭಾರತದ ಖಾಯಂ ಪ್ರತಿನಿಧಿ ಪರ್ವತನೇನಿ ಹರೀಶ್ ಜಮ್ಮು ಮತ್ತು ಕಾಶ್ಮೀರದ ಕುರಿತು ಪಾಕಿಸ್ತಾನದ ಹೇಳಿಕೆಗಳಿಗೆ ಆಕ್ಷೇಪ ವ್ಯಕ್ತಪಡಿಸಿದರು.
ಪಾಕಿಸ್ತಾನ ಮತ್ತೊಮ್ಮೆ ಭಾರತದ ಆಂತರಿಕ ವಿಷಯಗಳಿಗೆ ಸಂಬAಧಿಸಿದAತೆ ಪ್ರಸ್ತಾಪ ಇಟ್ಟಿದೆ. ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರವು ಭಾರತದ ಆಂತರಿಕ ವಿಷಯವಾಗಿದ್ದು, ಆ ಬಗ್ಗೆ ಪಾಕಿಸ್ತಾನದ ಅನಗತ್ಯ ಉಲ್ಲೇಖವು ನನ್ನನ್ನು ಪ್ರತಿಕ್ರಿಯಿಸುವಂತೆ ಮಾಡಿದೆ. ತಪ್ಪು ಮಾಹಿತಿ ನೀಡುವುದು ಮತ್ತು ದಾರಿತಪ್ಪಿಸುವ ಹೇಳಿಕೆ ನೀಡುವ ಮೂಲಕ ಪಾಕಿಸ್ತಾನವು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸದಸ್ಯನಾಗಿ ತನ್ನ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ತರಾಟಗೆ ತೆಗೆದುಕೊಂಡರು.ತಮ್ಮ ವಿಭಜಿತ ರಾಜಕೀಯ ಹಿತಾಸಕ್ತಿಗಳಿಗಾಗಿ ವಿಶ್ವಸಂಸ್ಥೆಯ ವೇದಿಕೆಯನ್ನ ಪಾಕಿಸ್ತಾನ ದುರುಪಯೋಗ ಮಾಡಿಕೊಳ್ಳುತ್ತಿದೆ. ಭದ್ರತಾ ಮಂಡಳಿಯ ಸದಸ್ಯರಾಗಿರುವುದೇ ದೊಡ್ಡ ಜವಾಬ್ದಾರಿ. ಇದನ್ನ ಪಾಕಿಸ್ತಾನಕ್ಕೆ ನೆನಪಿಸಲು ಬಯಸುತ್ತೇನೆ. ಇದು ಪಕ್ಷಪಾತದ ಮತ್ತು ಸುಳ್ಳು ನಿರೂಪಣೆಗಳನ್ನು ಹರಡುವ ವೇದಿಕೆಯಲ್ಲ ಎಂದು ತಿರುಗೇಟು ನೀಡಿದರು.ಇದೇ ವೇಳೆ ಕಾಶ್ಮೀರದ ಬಗ್ಗೆ ಭಾರತದ ನಿಲುವನ್ನು ಸ್ಪಷ್ಟಪಡಿಸಿದ ಅವರು, ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಅಂಗವಾಗಿತ್ತು, ಈಗಲೂ ಇದೆ ಮತ್ತು ಮುಂದೆಯೂ ಹಾಗೇ ಉಳಿಯುತ್ತದೆ. ಇದಕ್ಕೆ ವಿರುದ್ಧವಾದ ಯಾವುದೇ ಹೇಳಿಕೆ ಆಧಾರರಹಿತ. ಪಾಕಿಸ್ತಾನದ ಸುಳ್ಳು ಹೇಳಿಕೆಗಳು ನೆಲದ ವಾಸ್ತವತೆಯನ್ನು ಬದಲಾಯಿಸುವುದಿಲ್ಲ ಎಂದಿದ್ದಾರೆ.
ಜಮ್ಮು ಮತ್ತು ಕಾಶ್ಮೀರವು ಭಾರತದ ಅವಿಭಾಜ್ಯ ಅಂಗ ವಿಶ್ವ ಸಂಸ್ಥೆಯಲ್ಲಿ ಪಾಕ್ ವಿರುದ್ಧ ಭಾರತ ವಾಗ್ದಾಳಿ



