ಚಾಮರಾಜನಗರ: ರಾಜ್ಯಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರ ಅಭಿವೃದ್ಧಿಗಾಗಿ ರೂಪಿಸಿರುವ ಕಾರ್ಯಕ್ರಮಗಳು ಹಾಗೂ ಪಂಚ ಗ್ಯಾರಂಟಿ ಯೋಜನೆಗಳು ನವಕರ್ನಾಟಕದ ನಿರ್ಮಾಣಕ್ಕೆ ಸಹಕಾರಿಯಾಗಿವೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಅವರು ತಿಳಿಸಿದರು.
ಕೊಳ್ಳೇಗಾಲ ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ೩ ದಿನಗಳ ಕಾಲ ಆಯೋಜಿಸಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರ ಅಭಿವೃದ್ಧಿಗಾಗಿ ರಾಜ್ಯಸರ್ಕಾರ ರೂಪಿಸಿರುವ ಕಾರ್ಯಕ್ರಮಗಳು ಹಾಗೂ ಪಂಚ ಗ್ಯಾರಂಟಿ ಯೋಜನೆಗಳ ಕುರಿತ ವಸ್ತುಪ್ರದರ್ಶನ ಮಳಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನೇತೃತ್ವದ ರಾಜ್ಯಸರ್ಕಾರವು ೨೦೧೩-೧೮ರ ಅವಧಿಯಲ್ಲಿ ಜನತೆಗೆ ಭಾಗ್ಯಗಳ ಭಾಗ್ಯ ನೀಡಿತ್ತು. ಇಡೀ ದೇಶದಲ್ಲಿಯೇ ಭಾಗ್ಯಗಳ ಭಾಗ್ಯ ನೀಡಿದವರು ಎಂದರೇ ಅದು ಸಿದ್ದರಾಮಯ್ಯನವರು ಮಾತ್ರ ಎಂದು ದೇಶವೇ ಕೊಂಡಾಡುತ್ತಿದೆ. ಮುಂದುವರಿದು ೨ನೇ ಬಾರಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಅವರು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಅಭಿವೃದ್ಧಿ ಕೆಲಸ-ಕಾರ್ಯಗಳಿಗೆ ಮುಂದಾಗಿದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅನೇಕ ನಿರುದ್ಯೋಗಿ ಯುವಕ, ಯುವತಿಯರಿಗೆ ಸಾಕಷ್ಟು ಅನುಕೂಲಗಳಾಗಿದ್ದು, ಆ ಮೂಲಕ ನವಕರ್ನಾಟಕದ ನಿರ್ಮಾಣಕ್ಕೆ ನಾಂದಿ ಹಾಡಿದ್ದಾರೆ ಎಂದರು.
ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನಕ್ಕಾಗಿ ವಾರ್ಷಿಕವಾಗಿ ೫೬ ಸಾವಿರ ಕೋಟಿ ರೂ. ಅನುದಾನ ಮೀಸಲಿಟ್ಟಿದ್ದು, ಜಿ.ಎಸ್.ಟಿ ಕಡಿಮೆಯಾದ ಬಳಿಕ ೫೪ ಸಾವಿರ ಕೋಟಿ ರೂ.ಗಳಿಗೆ ಮಿತಿಗೊಂಡಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರಿಗೆ ರಾಜ್ಯಸರ್ಕಾರ ರೂಪಿಸಿರುವ ಕಾರ್ಯಕ್ರಮಗಳ ಬಗ್ಗೆ ಹಾಗೂ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಅರಿವು ಮೂಡಿಸಲು ರಾಜ್ಯದ ಮೀಸಲು ವಿಧಾನಸಭಾ ಕ್ಷೇತ್ರಗಳಲ್ಲಿ ೩ ದಿನಗಳ ಕಾಲ ವಸ್ತುಪ್ರದರ್ಶನ ಮಳಿಗೆ ತೆರೆಯಲಾಗುತ್ತಿದೆ. ಹಾಗೆಯೇ ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರವಾಗಿದ್ದು, ಈ ಭಾಗದ ಜನತೆಗೆ ಸರ್ಕಾರದ ಜನಪರ ಕಾರ್ಯಕ್ರಮಗಳ ಮನವರಿಕೆ ಮಾಡಿಕೊಡಲು ಮಳಿಗೆ ತೆರೆಯಲಾಗಿದೆ ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆಗಳು ರಾಜ್ಯದ ಸರ್ವಜನರಿಗೂ ಅನುಕೂಲ ಕಲ್ಪಿಸಿವೆ. ಪ್ರತಿ ಕುಟುಂಬಕ್ಕೆ ಪ್ರತಿತಿಂಗಳು ಅಂದಾಜು ತಲಾ ೫ ಸಾವಿರ ರೂ. ದೊರೆಯುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ಬಡವರ ಬದುಕು ಬಂಗಾರವಾಗಿದೆ. ಸಾಮಾನ್ಯ ಜನರು ಸರ್ಕಾರಿ ಬಸ್ಗಳಲ್ಲಿ ಪ್ರಯಾಣಿಸಲು ಬಸ್ ನಿಲ್ದಾಣಕ್ಕೆ ಬರುವುದರಿಂದ ಇಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಳಿಗೆ ತೆರೆದು ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಅರಿವು ಮೂಡಿಸಲಾಗುತ್ತಿದೆ ಎಂದರು.
ಸರ್ಕಾರವು ಅಧಿಕಾರಕ್ಕೆ ಬಂದ ಬಳಿಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಅಭಿವೃದ್ಧಿಪರ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಇದಕ್ಕಾಗಿ ಸರ್ಕಾರವು ಹೆಚ್ಚಿನ ಅನುದಾನವನ್ನು ಸದ್ವಿನಿಯೋಗ ಮಾಡುತ್ತಿದೆ ಎಂದು ಅವರು ತಿಳಿಸಿದರು.
ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಾದ ಎಚ್.ವಿ. ಚಂದ್ರು ಅವರು ಮಾತನಾಡಿ ರಾಜ್ಯಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ. ಬಡವರು ಹಾಗೂ ಮಹಿಳೆಯರು ಆರ್ಥಿಕವಾಗಿ ಸದೃಢಗೊಂಡು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಯೋಜನೆಗಳು ನೆರವಾಗಿವೆ. ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯಲ್ಲಿ ಅಧಿಕಾರಿಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಿದ್ದು, ಚಾಮರಾಜನಗರ ಜಿಲ್ಲೆ ಗ್ಯಾರಂಟಿ ಯೋಜನೆಗಳ ಪ್ರಗತಿಯಲ್ಲಿ ಮುಂಚೂಣಿಯಲ್ಲಿದೆ ಎಂದರು.
ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರ ಅಭಿವೃದ್ಧಿಗಾಗಿ ರಾಜ್ಯಸರ್ಕಾರ ರೂಪಿಸಿರುವ ಕಾರ್ಯಕ್ರಮಗಳು ಹಾಗೂ ಪಂಚ ಗ್ಯಾರಂಟಿ ಯೋಜನೆಗಳ ಕುರಿತ ವಸ್ತುಪ್ರದರ್ಶನ ಮಳಿಗೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಕೊಳ್ಳೇಗಾಲ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರಾದ ರಾಜೇಂದ್ರ, ಉಪಾಧ್ಯಕ್ಷರಾದ ರವಿ, ಗುಂಡ್ಲುಪೇಟೆ ತಾಲೂಕು ಅಧ್ಯಕ್ಷರಾದ ಉಮಾಪತಿ, ಯಳಂದೂರು ತಾಲೂಕು ಅಧ್ಯಕ್ಷರಾದ ಪ್ರಭುಪ್ರಸಾದ್, ತಾಲೂಕು ಸಮಿತಿ ಸದಸ್ಯರಾದ ಶಿವಕುಮಾರ್, ಪರಮೇಶ್ವರ, ರಾಜೇಗೌಡ, ಸಹನಾ ಪ್ರಿಯಾ, ಕೃಷ್ಣವೇಣಿ, ಮಾಜ್, ಸಿಕ್ಮತ್ ಬಾಬು, ನಗರಸಭೆ ಪೌರಾಯುಕ್ತರಾದ ರುದ್ರಮ್ಮ ಶರಣಯ್ಯ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗುರುಶಾಂತಪ್ಪ ಬೆಳ್ಳುಂಡಗಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಎ. ರಮೇಶ, ವಾರ್ತಾ ಸಹಾಯಕರಾದ ಸುರೇಶ್ಕುಮಾರ್, ಯಳಂದೂರು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರಾದ ಎಲ್. ರಾಮಚಂದ್ರ, ಪಿ.ಎ.ಸಿ.ಸಿ ಬ್ಯಾಂಕ್ ನಿರ್ದೇಶಕರಾದ ಮಂಜುನಾಥ್, ಇತರರು ಇದ್ದರು.
ನವಕರ್ನಾಟಕ ನಿರ್ಮಾಣಕ್ಕೆ ಸರ್ಕಾರದ ಯೋಜನೆ ಸಹಕಾರಿ: ಕೃಷ್ಣಮೂರ್ತಿ



