ಕೆಜಿಎಫ್: ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ಉದ್ದೇಶದಿಂದ, ಕೆಜಿಎಫ್ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಬಿಎಲ್ಎ-೨ (ಬೂತ್ ಮಟ್ಟದ ಏಜೆಂಟ್ಗಳು) ಕಾರ್ಯಾಗಾರವನ್ನು ಜೆಡಿಎಸ್ ಮುಖಂಡ ಡಾ ರಮೇಶ್ ಬಾಬು ನೇತೃತ್ವದಲ್ಲಿ ಕೆಜಿಎಫ್ ನಗರದ ಕಿಂಗ್ ಜಾರ್ಜ್ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ಮತದಾರರ ಪ್ರತಿ ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಸಕ್ರಿಯರಾಗಿರಬೇಕು. ಮತದಾರರ ಪಟ್ಟಿಯಲ್ಲಿ ಹೊಸಬರ ಹೆಸರನ್ನು ಸೇರಿಸುವುದು ಮತ್ತು ಅಕ್ರಮಗಳನ್ನು ತಡೆಯುವುದು ಬಿಎಲ್ಎಗಳ ಆದ್ಯತೆಯಾಗಲಿ” ಎಂದರು.
ಪ್ರಾದೇಶಿಕ ಪಕ್ಷದ ಅನಿವಾರ್ಯತೆ ಮತ್ತು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಸಾಧನೆಗಳನ್ನು ಜನರಿಗೆ ತಲುಪಿಸುವಂತೆ ಸೂಚಿಸಿದರು.
ಕೆಜಿಎಫ್ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಎಲ್ಲಾ ರೀತಿಯ ಪ್ರಯತ್ನವನ್ನು ಮಾಡುತ್ತಿದ್ದೇವೆ. ಈಗಾಗಲೇ ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸುತ್ತಿದ್ದು, ಜೆಡಿಎಸ್ ಪಕ್ಷ ಮಾಡಿರುವ ಸಾಧನೆಗಳ ಬಗ್ಗೆ ಪ್ರಚಾರ ಮಾಡುತ್ತಿದ್ದು ಮುಂದೆ ಬರುವ ಚುನಾವಣೆಗಳಲ್ಲಿ ಫಲಿತಾಂಶ ನಿರೀಕ್ಷಿಸಬಹುದು ಎಂದು ತಿಳಿಸಿದರು.
ಪಕ್ಷದ ವಕ್ತಾರ ಪ್ರದೀಪ್ ಅವರು ಮಾತನಾಡಿ, ಕೇವಲ ವೇದಿಕೆಗಳ ಮೇಲೆ ಭಾಷಣ ಮಾಡುವುದರಿಂದ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ. ಮನೆ ಮನೆಗೆ ತೆರಳಿ ಜನರ ಸಮಸ್ಯೆಗಳಿಗೆ ಸ್ಪಂದಿಸಿದಾಗ ಮಾತ್ರ ಜೆಡಿಎಸ್ ಬಲಿಷ್ಠವಾಗಲಿದೆ” ಎಂದು ಕಾರ್ಯಕರ್ತರಲ್ಲಿ ಹುರುಪು ತುಂಬಿದರು.
ಕೆಜಿಎಫ್ ಕ್ಷೇತ್ರದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಎಲ್ಲರೂ ವೈಮನಸ್ಸು ಮರೆತು ಒಗ್ಗಟ್ಟಿನಿಂದ ಕೆಲಸ ಮಾಡಬೇಕೆಂದು ಕರೆ ನೀಡಿದರು. ಬೂತ್ ಮಟ್ಟದಲ್ಲಿ ಯುವಕರನ್ನು ಪಕ್ಷದತ್ತ ಸೆಳೆಯುವ ಮೂಲಕ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ತಿಳಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಜೆಡಿಎಸ್ ಪಕ್ಷದ ವಕ್ತಾರ ಪ್ರದೀಪ್ ಜೆಡಿಎಸ್ ತಾಲ್ಲೂಕು ಘಟಕ ಅಧ್ಯಕ್ಷ ಲಿಯೋ ಜೋಸೆಫ್ ಹಾಗೂ ವ್ಯಾಪ್ತಿಯ ಪ್ರಮುಖ ಜೆಡಿಎಸ್ ಮುಖಂಡರು, ವಿವಿಧ ಘಟಕಗಳ
ಪದಾಧಿಕಾರಿಗಳು ಹಾಗೂ ನೂರಾರು ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿದ್ದರು.
ಜೆಡಿಎಸ್ ಬಲವರ್ಧನೆಗೆ ಬಿಎಲ್ಎ-೨ ಕಾರ್ಯಾಗಾರಕ್ಕೆ ಚಾಲನೆ



