ದಾವಣಗೆರೆ: ಜಗತ್ತಿನಲ್ಲಿ ಲಕ್ಷಾಂತರ ಮಕ್ಕಳು ಬಾಲಕಾರ್ಮಿಕರಾಗಿ ಕಷ್ಟಪಡುತ್ತಿದ್ದು, ಈ ಪಿಡುಗನ್ನು ತಡೆಗಟ್ಟುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಮಕ್ಕಳಿಗೆ ಶಿಕ್ಷಣದ ಅವಕಾಶ ಕಲ್ಪಿಸುವ ಮೂಲಕ ಅವರ ಭವಿಷ್ಯವನ್ನು ರೂಪಿಸಬೇಕಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೇ ಮಾಧವ ವಿಠ್ಠಲರಾವ್ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಸ್ಥೆ, ದಾವಣಗೆರೆ ಹಾಗೂ ಸ್ವಯಂ ಸೇವಾ ಸಂಸ್ಥೆಯವರ ಸಂಯುಕ್ತಾಶ್ರಯದಲ್ಲಿ ಎಸ್ ಪಿ ಎಸ್ ನಗರದಲ್ಲಿರುವ ಸರ್ಕಾರಿ ಪ್ರೌಢ ಶಾಲೆಯಲ್ಲಿ ಏರ್ಪಡಿಸಿದ್ದ ‘ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಪಾಟಿಸಿ ಮಾತನಾಡಿದರು.
ಇಡೀ ವಿಶ್ವದಲ್ಲಿ ಪ್ರಸ್ತುತ ಸುಮಾರು 13.8 ಕೋಟಿ (138 ಮಿಲಿಯನ್) ಮಕ್ಕಳು ಬಾಲಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ಇವರಲ್ಲಿ ಅತಿ ಹೆಚ್ಚಿನ ಸಂಖ್ಯೆಯ ಎಂದರೆ ಸುಮಾರು 8.4 ಕೋಟಿ (84 ಮಿಲಿಯನ್) ಮಕ್ಕಳು ಕೃಷಿ ಮತ್ತು ತೋಟಗಾರಿಕೆ ವಲಯದಲ್ಲಿ ತೊಡಗಿಸಿಕೊಂಡಿದ್ದಾರೆ. ಶಾಲೆಯಲ್ಲಿ ಪೆನ್ನು, ಪುಸ್ತಕ ಹಿಡಿದು ಓದಬೇಕಾದ ವಯಸ್ಸಿನ ಮಕ್ಕಳು ಬಡತನ ಹಾಗೂ ಪೋಷಕರ ಅಜ್ಞಾನದ ಕಾರಣದಿಂದಾಗಿ ಹೋಟೆಲ್ಗಳಲ್ಲಿ ಪಾತ್ರೆ ತೊಳೆಯುವುದು, ಕೈಗಾಡಿ ಎಳೆಯುವುದು ಮತ್ತು ಕೃಷಿ ಕೆಲಸಗಳಲ್ಲಿ ತೊಡಗುತ್ತಿರುವುದು ದುರದೃಷ್ಟಕರ ಎಂದರು.
ಶಿಕ್ಷಣದ ಶಕ್ತಿಯಿಂದ ಇಡೀ ಜಗತ್ತನ್ನೇ ಬದಲಾಯಿಸಬಹುದು ಎಂಬ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯವನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಜಿಲ್ಲೆಯಾದ್ಯಂತ ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗದAತೆ ನೋಡಿಕೊಳ್ಳಲು ಮತ್ತು ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಾರ್ವಜನಿಕರು ಕೈಜೋಡಿಸಬೇಕೆಂದು ತಿಳಿಸಿದರು.
ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾದೀಶರು ಹಾಗೂ ಜಿಲ್ಲಾ ಕಾನೂನು ಸೇವಾಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ.ಸಿ.ರಂಗೇಗೌಡ ರವರು ಮಾತನಾಡಿ ಬಾಲಕಾರ್ಮಿಕ ಪದ್ಧತಿಯು ಕೇವಲ ಒಂದು ಸಮಸ್ಯೆಯಲ್ಲ, ಅದು ಇಡೀ ಸಮಾಜದ ಬೆಳವಣಿಗೆಗೆ ಮಾರಕವಾಗಿರುವ ಒಂದು ಪಿಡುಗು, ಭಾರತವು ಪ್ರಸ್ತುತ ಜಗತ್ತಿನಲ್ಲಿಯೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರವಾಗಿದೆ. ಈ ಬೃಹತ್ ಜನಸಂಖ್ಯೆಯಲ್ಲಿ ಯುವಕರು ಮತ್ತು ಮಕ್ಕಳ ಪ್ರಮಾಣವೇ ಹೆಚ್ಚಾಗಿದೆ. ಒಂದು ದೇಶದ ನಿಜವಾದ ಸಂಪತ್ತು ಅಲ್ಲಿನ ಜನಶಕ್ತಿಯಾಗಿದೆ. ಯಾವುದೇ ಹೊಸ ಆವಿಷ್ಕಾರ ಅಥವಾ ಕೈಗಾರಿಕಾ ಪ್ರಗತಿ ಸಾಧಿಸಬೇಕಾದರೂ ಸಮರ್ಥ ಮಾನವ ಸಂಪನ್ಮೂಲ ಅತ್ಯಗತ್ಯ ಎಂದು ತಿಳಿಸಿದರು.
ಶಾಲೆಗೆ ಹೋಗುವ ವಯಸ್ಸಿನಲ್ಲಿ ಮಕ್ಕಳು ಗ್ಯಾರೇಜ್, ಹೋಟೆಲ್ ಅಥವಾ ಯಾವುದೇ ಅಂಗಡಿಗಳಲ್ಲಿ ದುಡಿಯಲು ನಿಂತರೆ ದೇಶದ ಭವಿಷ್ಯ ಕತ್ತಲಾಗುತ್ತದೆ. ಇಂದಿನ ಮಕ್ಕಳೇ ದೇಶದ ನಿಜವಾದ ಆಸ್ತಿ, ದೇಶದ ಸತ್ಪ್ರಜೆಗಳಾಗಿ ರೂಪಗೊಳ್ಳಲು ಮಕ್ಕಳಿಗೆ ಕನಿಷ್ಠ ಎಸ್ಎಸ್ಎಲ್ಸಿ (SSಐಅ) ವರೆಗಿನ ವಿದ್ಯಾಭ್ಯಾಸ ಅತ್ಯಂತ ಅವಶ್ಯಕವಾಗಿದೆ. ಇದೇ ಕಾರಣಕ್ಕಾಗಿ ಕಾನೂನಿನಲ್ಲಿ 16 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯ ಶಿಕ್ಷಣದ ಹಕ್ಕನ್ನು ನೀಡಲಾಗಿದೆ. ಮಕ್ಕಳು ಶಿಕ್ಷಣದಿಂದ ವಂಚಿತರಾಗಿ ಕಾರ್ಮಿಕರಾಗಿ ಬದಲಾಗುವುದನ್ನು ತಡೆಯಲು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು ಎಂದು ತಿಳಿಸಿದರು.
ಬಾಲಕಾರ್ಮಿಕ ಪದ್ಧತಿ ಜೀವಂತವಾಗಿರಲು ಮುಖ್ಯವಾಗಿ ಎರಡು ರೀತಿಯ ಮನಸ್ಥಿತಿಗಳು ಕಾರಣವಾಗಿದೆ ಮಕ್ಕಳು ದುಡಿದರೆ ಕುಟುಂಬ ನಿರ್ವಹಣೆಗೆ ಸಹಾಯವಾಗುತ್ತದೆ ಎನ್ನುವ ಪೋಷಕರ ಆಲೋಚನೆ ಮತ್ತು ಕಡಿಮೆ ಕೂಲಿ ನೀಡಿ ಮಕ್ಕಳಿಂದ ಹೆಚ್ಚು ಕೆಲಸ ತೆಗೆದುಕೊಳ್ಳಬಹುದು ಎನ್ನುವ ಉದ್ಯಮದಾರರ ಸ್ವಾರ್ಥ ಬುದ್ಧಿ ಇದೆ ಆದರೆ ಸರ್ಕಾರವು ಬಿಪಿಎಲ್ ಕಾರ್ಡ್, ಉಚಿತ ರೇಷನ್ ಸೇರಿದಂತೆ ಬಡ ಕುಟುಂಬಗಳಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದರೂ, ಮಕ್ಕಳನ್ನು ಕೆಲಸಕ್ಕೆ ಕಳುಹಿಸುವುದು ಅಕ್ಷಮ್ಯ ಅಪರಾಧವಾಗಿದೆ. ಇಂತಹ ಮನಸ್ಥಿತಿ ಉಳ್ಳವರನ್ನು ‘ಸಮಾಜಘಾತುಕ ಶಕ್ತಿಗಳು’ ಎಂದು ಕರೆದರೂ ತಪ್ಪಿಲ್ಲ ಎಂದು ತಿಳಿಸಿದರು.
ಸಹಾಯಕ ಕಾರ್ಮಿಕ ಆಯುಕ್ತ ಅವಿನಾಶ್ ರವರು ಮಕ್ಕಳಿಗೆ ಪ್ರತಿಜ್ಞಾವಿಧಿ ಭೋದಿಸಿದರು. ಹಾಗೂ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಿದರು.
ಕಾರ್ಯಕ್ರಮಕ್ಕೂ ಮೊದಲು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾದೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ವೇಲಾ ಡಿ.ಕೆ ಇವರು ಜಾಗೃತಿ ಜಾಥಾಗೆ ಚಾಲನೆ ನೀಡಿ, ಬಾಲಕಾರ್ಮಿಕ ಪದ್ಧತಿಯು ಸಮಾಜಕ್ಕೆ ಒಂದು ಮಾರಕ ಹಾಗೂ ಮಕ್ಕಳ ಬೆಳವಣಿಗೆಯನ್ನು ಕುಂಠಿತಗೊಳಿಸುವ ಸಂಕೇತವಾಗಿದೆ. ಇದನ್ನು ತಡೆಗಟ್ಟುವುದು ನಮ್ಮೆಲ್ಲರ ಕರ್ತವ್ಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಪ್ರತಿ ವರ್ಷ ಬಾಲಕಾರ್ಮಿಕರ ಸಂಖ್ಯೆಯನ್ನು ಕನಿಷ್ಠ ಮಟ್ಟಕ್ಕೆ ತರಲು ನಿರಂತರವಾಗಿ ಶ್ರಮಿಸುತ್ತಾ ಬಂದಿದೆ. ಬಾಲಕಾರ್ಮಿಕ ಪದ್ಧತಿಯನ್ನು ಕಣ್ಣಾರೆ ಕಂಡು ಸುಮ್ಮನಿರುವುದು, ಅದಕ್ಕೆ ಪ್ರೋತ್ಸಾಹ ನೀಡುವುದು ಅಥವಾ ಅದರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದು ದೇಶದ ಮತ್ತು ಮಕ್ಕಳ ಭವಿಷ್ಯಕ್ಕೆ ಮಾರಕವಾಗಿ ಪರಿಣಮಿಸಲಿದೆ. ಪ್ರತಿಯೊಬ್ಬ ಮಗುವಿನಲ್ಲೂ ಒಂದು ವಿಶಿಷ್ಟ ಪ್ರತಿಭೆ ಇರುತ್ತದೆ. ಆದರೆ ಮಕ್ಕಳು ಬಾಲಕಾರ್ಮಿಕರಾಗಿ ದುಡಿಯುವುದರಿಂದ ಅವರಲ್ಲಿನ ಪ್ರತಿಭೆ ಮರೆಯಾಗಿ, ಜೀವನವೇ ಕಷ್ಟದ ಪರಿಸ್ಥಿತಿಗೆ ಸಿಲುಕುತ್ತದೆ. ಮಕ್ಕಳನ್ನು ಬಾಲಕಾರ್ಮಿಕರನ್ನಾಗಿ ನೋಡದೆ, ಅವರನ್ನು ಮಕ್ಕಳಾಗಿಯೇ ಬೆಳೆಯಲು ಬಿಡಬೇಕು. ಒಮ್ಮೆ ಕಳೆದುಹೋದ ಬಾಲ್ಯ ಮತ್ತೆ ಮರಳಿ ಬರಲು ಸಾಧ್ಯವಿಲ್ಲ ಎಂದರು.
ಎಲ್ಲಾದರೂ ಬಾಲಕಾರ್ಮಿಕರು ಕಂಡುಬAದಲ್ಲಿ ಸಾರ್ವಜನಿಕರು ಅಥವಾ ಪಕ್ಕದ ಸಂಸ್ಥೆಗಳವರು ತಕ್ಷಣವೇ ಕಾರ್ಮಿಕ ಇಲಾಖೆಗೆ ಅಥವಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ (ಆಐSಂ) ಮಾಹಿತಿ ನೀಡಬೇಕು. ಸರ್ಕಾರದಲ್ಲಿ ಇದಕ್ಕಾಗಿ ಹಲವು ಕಟ್ಟುನಿಟ್ಟಿನ ನಿಯಮಗಳು ಮತ್ತು ಯೋಜನೆಗಳಿದ್ದು, ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು ಮತ್ತು “ಮಕ್ಕಳ ಬಾಲ್ಯದಲ್ಲಿ… ಮಕ್ಕಳ ಬಾಲ್ಯವನ್ನು ರಕ್ಷಿಸೋಣ… ಅವರ ಬಾಳಿನಲ್ಲಿ ಬೆಳಕು ಚೆಲ್ಲೋಣ…” ಎಂಬ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು.
ಹಿಂದುಗಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ರೇಣುಕಾದೇವಿ, ಜಿಲ್ಲಾ ಪರಿಶಿಷ್ಠ ಕಲ್ಯಾಣಾಧಿಕಾರಿ ನವೀನ್ ಮಠದ್ ಶಾಲೆಯ ಮುಖ್ಯೋಪಾಧ್ಯಾಯರಾದ ಶಿವಾನಂದ್ ಹಾಗೂ ಇತರರು ಉಪಸ್ಥಿತರಿದ್ದರು.
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪಣತೊಡಿ: ಗಿತ್ತೆ ಮಾಧವ ವಿಠ್ಠಲರಾವ್ ಅಭಿಮತ



