ರಾಮನಗರ: ಶಾಸಕ ಇಕ್ಬಾಲ್ ಹುಸೇನ್ ಆರೋಗ್ಯ ಚೇತರಿಕೆಯಾಗಿ ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ಕಾಂಗ್ರೆಸ್ ಮುಖಂಡರು ನಗರದ ಚಾಮುಂಡೇಶ್ವರಿ ದೇವಾಲಯದಲ್ಲಿ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಿದರು.
ಕಾಂಗ್ರೆಸ್ ಮುಖಂಡ ಶಂಭೂಗೌಡ ಮತ್ತು ಮಹಿಳಾ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷೆ ಮಂಗಳಮ್ಮ ಶಂಭೂಗೌಡರವರ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ತಾಯಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.
ಈ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡ ಶಂಭೂಗೌಡ ಮಾತನಾಡಿ, ಶಾಸಕ ಇಕ್ಬಾಲ್ ಹುಸೇನ್ ರವರು ಅನಾರೋಗ್ಯ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ತಾಯಿ ಚಾಮುಂಡಿ ದೇವಿ ಆರೋಗ್ಯ ಭಾಗ್ಯ ಕರುಣಿಸುವಂತೆ ಪ್ರಾರ್ಥಿಸಿ ವಿಶೇಷ ಸಲ್ಲಿಸಿದ್ದೇವೆ. ಕ್ಷೇತ್ರದ ಜನ ಸೇವಕರಾದ ಇಕ್ಬಾಲ್ ರವರು ಶೀಘ್ರ ಗುಣಮುಖರಾಗಲಿ ಎಂಬುದು ಕ್ಷೇತ್ರದ ಜನರು ಪ್ರಾರ್ಥನೆಯಾಗಿದೆ ಎಂದು ಹೇಳಿದರು.
ಇಕ್ಬಾಲ್ ಹುಸೇನ್ ರವರು ಪ್ರತಿ ವರ್ಷ ಚಾಮುಂಡೇಶ್ವರಿ ಕರಗ ಮಹೋತ್ಸವವನ್ನು ಆಚರಿಸುತ್ತಾ ಬಂದಿದ್ದಾರೆ. ಇನ್ನು ಮುಂದೆಯೂ ಅವರಿಂದಲೇ ಮತ್ತಷ್ಟು ಅದ್ಧೂರಿಯಾಗಿ ಆಚರಿಸುವಂತಾಗಬೇಕು. ಜೊತೆಗೆ 2028ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಅವರೇ ಗೆದ್ದು ಬರುವಂತೆ ಚಾಮುಂಡಿ ದೇವಿ ಆಶೀರ್ವಾದ ಮಾಡಲಿ ಎಂದು ಪ್ರಾರ್ಥಿಸಿದರು.
ರಾ – ಚ ನಗರಾಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಸಿಎನ್ ಆರ್ ವೆಂಕಟೇಶ್ ಮಾತನಾಡಿ, ಶಾಸಕ ಇಕ್ಬಾಲ್ ಹುಸೇನ್ ರವರ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಬೇಗ ಆರೋಗ್ಯ ಚೇತರಿಸಿಕೊಂಡು ಜನರ ಸೇವೆಗೆ ಮರಳುವಂತಾಗಲಿ. ಅವರಿಗೆ ತಾಯಿ ಚಾಮುಂಡಿ ಆರೋಗ್ಯ ಆಯಸ್ಸು ಕೊಡಲೆಂದು ಪ್ರಾರ್ಥಿಸಿರುವುದಾಗಿ ಹೇಳಿದರು.
ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳ ಮೂಲಕ ಇಕ್ಬಾಲ್ ಹುಸೇನ್ ರವರು ಜನಪ್ರಿಯ ಶಾಸಕ ಎನಿಸಿಕೊಂಡಿದ್ದಾರೆ. ಇನ್ನೂ ಬೇಕಾದಷ್ಟು ಕೆಲಸಗಳು ಬಾಕಿ ಉಳಿದಿದ್ದು, ಜನರ ಸೇವೆಗೆ ಅವರ ಅಗತ್ಯವಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಮಾಜಿ ಅಧ್ಯಕ್ಷೆ ಪಾರ್ವತಮ್ಮ, ಜಿಲ್ಲಾ ಪಂಚಾಯಿಯಿ ಮಾಜಿ ಸದಸ್ಯೆ ಮಂಜುಳಾ ಮರಿದೇವರು, ಮಹಿಳಾ ಮುಖಂಡರಾದ ಪಾರ್ವತಮ್ಮ, ಪುಟ್ಟಗೌರಮ್ಮ, ಮುಖಂಡರಾದ ಶಿವಲಿಂಗಪ್ಪ, ನರಸಿಂಹಯ್ಯ, ಉಮೇಶ್ , ರಾಮಣ್ಣ ಮತ್ತಿತರರು ಹಾಜರಿದ್ದರು.
ಶಾಸಕ ಇಕ್ಬಾಲ್ ಹುಸೇನ್ ಆರೋಗ್ಯ ಚೇತರಿಕೆಗೆ ಪ್ರಾರ್ಥಿಸಿ ವಿಶೇಷ ಪೂಜೆ



