ಕಾರವಾರ: ಮಂಗಳೂರು, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಪ್ರದೇಶಗಳ ಅಭಿವೃದ್ಧಿಗೆ ಹೊಸ ಪ್ರವಾಸೋದ್ಯಮ ನೀತಿ ಮಾಡಬೇಕು ಎನ್ನುವ ಆಲೋಚನೆ ಸರ್ಕಾರದ ಮುಂದಿದೆ. ಜನವರಿ 10ರಂದು ಮಂಗಳೂರಿನಲ್ಲಿ ಈ ಬಗ್ಗೆ ಮೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಮಲೆನಾಡು ಪ್ರದೇಶದ ಜಿಲ್ಲಾಧಿಕಾರಿಗಳ ಸಭೆ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಕಾರವಾರ ಶಾಸಕ ಸತೀಶ್ ಸೈಲ್ ಅವರ ಕಚೇರಿಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭಾನುವಾರ ರಾತ್ರಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದರು. ಈಗಾಗಲೇ ಒಂದು ಸುತ್ತಿನ ಮಾತುಕತೆಯನ್ನು ಈ ಭಾಗದ ಶಾಸಕರ ಜೊತೆ ನಡೆಸಿದ್ದೇನೆ. ಮಲೆನಾಡು ಹಾಗೂ ಕರಾವಳಿ ಭಾಗದ ಪ್ರವಾಸೋದ್ಯಮ ಅಭಿವೃದ್ಧಿಗೆ ಪಿಪಿಪಿ ಮಾದರಿಯಲ್ಲಿ ಹೊಸ ನೀತಿ ತರಲಾಗುವುದು. ಖಾಸಗಿಯವರಿಗೆ ಹೆಚ್ಚಿನ ಬಂಡವಾಳ ಹೂಡಿಕೆಗೆ ಅವಕಾಶ ನೀಡಿ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಒತ್ತು ನೀಡಲಾಗುವುದು” ಎಂದರು.
ಈ ಸಭೆಗೆ ಬಂಡವಾಳ ಹೂಡಿಕೆದಾರರಿಗೆ ಆಹ್ವಾನ ನೀಡಲಾಗುತ್ತಿದೆ. ಹೊರದೇಶದವರಿಗೂ ಆಹ್ವಾನ ನೀಡಲಾಗುವುದು. ಇವರು ತಮ್ಮ ಬೇಡಿಕೆ ಜೊತೆಗೆ ಸಲಹೆ ಸೂಚನೆಗಳನ್ನು ನೀಡಬಹುದು. ಬಂಡವಾಳ ಹೂಡಿಕೆ ಮಾಡುವವರನ್ನು ಆಹ್ವಾನಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ” ಎಂದರು.
ಮುಖ್ಯಮಂತ್ರಿಯವರು, ಪ್ರವಾಸೋದ್ಯಮ ಸಚಿವರು, ವಿಧಾನಸಭೆ ಸಭಾಧ್ಯಕ್ಷರು ಈ ಸಭೆಯಲ್ಲಿ ಇರಲಿದ್ದಾರೆ. ನಾನೇ ಖುದ್ದಾಗಿ ಇದರ ಜವಾಬ್ದಾರಿ ತೆಗೆದುಕೊಂಡಿದ್ದೇನೆ. ಸಂಸತ್ ಸದಸ್ಯರು, ಶಾಸಕರು, ಸ್ಥಳೀಯ ಸಂಸ್ಥೆಗಳ ಸದಸ್ಯರಿಗೂ ಆಹ್ವಾನ ನೀಡುವುದಕ್ಕೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ” ಎಂದರು.
ಸಿಆರ್ ಜೆಡ್ ಅನುಮತಿ ಕೇಂದ್ರ ಸರ್ಕಾರ ನೀಡಬೇಕಾಗುತ್ತದೆ ಇದನ್ನು ಪಡೆಯದೇ ಪ್ರವಾಸೋದ್ಯಮ ಅಭಿವೃದ್ಧಿಗೆ ಸಭೆ ನಡೆಸಿದರೆ ಪ್ರಯೋಜನ ಏನು ಎಂದು ಕೇಳಿದಾಗ, “ಇದರ ಬಗ್ಗೆ ಚರ್ಚೆ ನಡೆಸಲು ಎಂದೇ ಸಭೆಗೆ ಕೇಂದ್ರದ ಅಧಿಕಾರಿಗಳನ್ನು ಆಹ್ವಾನಿಸಲಾಗಿದೆ. ಗೋವಾದಿಂದ ಬರುವಾಗ ನೋಡಿಕೊಂಡು ಬಂದೆ. ಅಲ್ಲಿಗೆ ಒಂದು ಕಾನುನು ಹಾಗೂ ಕರ್ನಾಟಕಕ್ಕೆ ಒಂದು ಕಾನುನು ಮಾಡಲು ಆಗುವುದಿಲ್ಲ. ಕಾನೂನು ಚೌಕಟ್ಟಿನಲ್ಲೇ ಕೆಲಸ ಮಾಡಲಾಗುವುದು. ಸಮುದ್ರ ತೀರ ರಕ್ಷಣೆಗೆ ಏನು ಗೈಡ್ ಲೈನ್ ಇದೆ ಅದರಂತೆ ಕೆಲಸ ಮಾಡುತ್ತೇವೆ” ಎಂದರು.
ಈ ಭಾಗದ ಯುವ ಜನತೆ ಮುಂಬೈ, ಗೋವಾ, ಬೆಂಗಳೂರು, ಸೌದಿ ಕಡೆಗೆ ಕೆಲಸ ಅರಸಿ ಹೋಗುತ್ತಿದ್ದಾರೆ. ಇಲ್ಲಿನ ಮಾನವ ಸಂಪನ್ಮೂಲ ಇಲ್ಲಿಗೆ ಹೆಚ್ಚು ಬಳಕೆಯಾಗಬೇಕು. ಕಾರವಾರ ಏರ್ ಪೋರ್ಟ್ ನಿರ್ಮಾಣಕ್ಕೆ ಭೂಮಿ ನೀಡಿಕೆ, ಸಂತ್ರಸ್ತರಿಗೆ ಪರಿಹಾರ ಸೇರಿದಂತೆ ಇತರೆ ಸಂಗತಿಗಳಿಗೆ ಕ್ಯಾಬಿನೆಟ್ ನಲ್ಲಿ ಒಪ್ಪಿಗೆ ನೀಡಲಾಗಿದೆ. ನೌಕಾದಳದವರ ಜೊತೆ ಒಪ್ಪಂದ ಮಾಡಿಕೊಂಡು ಇಲ್ಲಿ ಅಭಿವೃದ್ಧಿ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ” ಎಂದರು.
ಸ್ಥಳೀಯ ಶಾಸಕರ ವಿರೋಧದ ಬಗ್ಗೆ ಕೇಳಿದಾಗ, “ಯಾರು ಏನೇ ವಿರೋಧ ಮಾಡುತ್ತಾರೋ ಬಿಡುತ್ತಾರೋ ಮುಖ್ಯವಲ್ಲ. ನಮ್ಮ ಜನರಿಗೆ, ರೈತರಿಗೆ ಇದರಿಂದ ಅನುಕೂಲವಾಗುವುದು ಮುಖ್ಯ. ಅಂತರ್ಜಲ ಹೆಚ್ಚಾಗಬೇಕು. ಯಾವುದೇ ಒಳ್ಳೆ ಕೆಲಸ ಆಗುವಾಗ ವಿರೋಧ ವ್ಯಕ್ತ ಮಾಡುತ್ತಾರೆ. ಸಂತ್ರಸ್ತರಿಗೆ ಕಾನೂನು ಪ್ರಕಾರ ಪರಿಹಾರ ನೀಡಲಾಗುವುದು” ಎಂದರು.



