ಭಾಗ್ಯನಗರ: ಬಡವರು, ಹಿಂದುಳಿದವರು ಹಾಗೂ ಸಂಕಷ್ಟದಲ್ಲಿರುವ ಜನರ ನೆರವಿಗೆ ಸದಾ ಸ್ಪಂದಿಸುತ್ತಾ, ಸಮಾಜಮುಖಿ ಸೇವಾ ಕಾರ್ಯಗಳ ಮೂಲಕ ಗುರುತಿಸಿಕೊಂಡಿರುವ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರು ಜನಸೇವೆಯಲ್ಲಿ ವಿಶಿಷ್ಟ ಹೆಜ್ಜೆ ಗುರುತು ಮೂಡಿಸಿದ್ದಾರೆ.
ಬಾಗೇಪಲ್ಲಿ ತಾಲ್ಲೂಕಿನ ಗೂಳೂರು ಹೋಬಳಿಯ ಚಿನ್ನಕಾಯಲಪಲ್ಲಿ ಗ್ರಾಮದ ರೈತ ಕುಟುಂಬದಲ್ಲಿ ಜನಿಸಿದ ಸುಬ್ಬಾರೆಡ್ಡಿಯವರು ಸ್ವಂತ ಪರಿಶ್ರಮ, ಛಲ ಹಾಗೂ ನಿರಂತರ ದುಡಿಮೆಯಿಂದ ಉದ್ಯಮ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಷ್ಠಿತ ಭಗಿನಿ ಹೋಟೆಲ್ ಸಮೂಹವನ್ನು ಬೆಳೆಸುವುದರ ಜೊತೆಗೆ ಸಾವಿರಾರು ಜನರಿಗೆ ಉದ್ಯೋಗಾವಕಾಶ ಕಲ್ಪಿಸಿದ್ದಾರೆ. ಸಂಪಾದಿಸಿದ ಸಂಪತ್ತಿನ ಒಂದು ಭಾಗವನ್ನು ಸಮಾಜದ ಬಡವರು ಮತ್ತು ಅಗತ್ಯವಿರುವವರ ಕಲ್ಯಾಣಕ್ಕೆ ಬಳಸುತ್ತಿರುವುದು ಅವರ ಸೇವಾ ಮನೋಭಾವಕ್ಕೆ ಸಾಕ್ಷಿಯಾಗಿದೆ.ಬಡವರ ಪಾಲಿನ ಆಶಾಕಿರಣ ಮದುವೆ ಹಬ್ಬ: ಸುಮಾರು 22 ವರ್ಷಗಳ ಹಿಂದೆ ಬಿಳ್ಳೂರಿನ ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಆರಂಭವಾದ ಬಡವರ ಮದುವೆ ಹಬ್ಬ ಇಂದು ಬಾಗೇಪಲ್ಲಿಯ ಪ್ರಮುಖ ಸಮಾಜಮುಖಿ ಕಾರ್ಯಕ್ರಮವಾಗಿ ಬೆಳೆದಿದೆ. ಆರ್ಥಿಕ ಸಂಕಷ್ಟದಿAದ ತಮ್ಮ ಮಕ್ಕಳ ಮದುವೆ ಮಾಡಲು ಸಾಧ್ಯವಾಗದ ಬಡ ಕುಟುಂಬಗಳಿಗೆ ನೆರವಾಗುವ ಉದ್ದೇಶದಿಂದ ಆರಂಭವಾದ ಈ ಸಾಮೂಹಿಕ ವಿವಾಹ ಕಾರ್ಯಕ್ರಮ ವರ್ಷದಿಂದ ವರ್ಷಕ್ಕೆ ಹೆಚ್ಚಿನ ಜನರನ್ನು ಸೆಳೆಯುತ್ತಿದೆ.
ಕಳೆದ ಹಲವು ವರ್ಷಗಳಲ್ಲಿ ಸಾವಿರಾರು ಜೋಡಿಗಳಿಗೆ ಉಚಿತವಾಗಿ ಸಾಮೂಹಿಕ ವಿವಾಹ ನೆರವೇರಿಸಲಾಗಿದ್ದು, ನವದಂಪತಿಗಳು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಲು ಸೀಮೆ ಹಸುಗಳನ್ನು ಉಡುಗೊರೆಯಾಗಿ ನೀಡಲಾಗಿದೆ. ವಿವಾಹದ ಜೊತೆಗೆ ಜೀವನೋಪಾಯಕ್ಕೆ ನೆರವಾಗುವ ಇಂತಹ ಯೋಜನೆ ಬಡ ಕುಟುಂಬಗಳಿಗೆ ಆರ್ಥಿಕವಾಗಿ ಸಹಕಾರಿಯಾಗಿದೆ. ಪ್ರತಿ ವರ್ಷ ನಡೆಯುವ ಈ ಕಾರ್ಯಕ್ರಮಕ್ಕೆ ಸಾವಿರಾರು ಮಂದಿ ಭಾಗವಹಿಸುತ್ತಿದ್ದು, ಬಡವರ ಮದುವೆಯನ್ನು ಒಂದು ಸಾಮಾಜಿಕ ಹಬ್ಬದಂತೆ ಆಚರಿಸುವ ಪರಂಪರೆ ರೂಪುಗೊಂಡಿದೆ.ಆರೋಗ್ಯ ಮತ್ತು ಶಿಕ್ಷಣಕ್ಕೆ ವಿಶೇಷ ಆದ್ಯತೆ: ಎಸ್.ಎನ್. ಸುಬ್ಬಾರೆಡ್ಡಿ ಚಾರಿಟಬಲ್ ಟ್ರಸ್ಟ್ ಮೂಲಕ ಆರೋಗ್ಯ ಕ್ಷೇತ್ರದಲ್ಲಿಯೂ ಹಲವು ಸೇವಾ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಬಾಗೇಪಲ್ಲಿ ಮತ್ತು ಗುಡಿಬಂಡೆ ಸರ್ಕಾರಿ ಆಸ್ಪತ್ರೆಗಳಿಗೆ ಅಂಬುಲೆನ್ಸ್ಗಳನ್ನು ನೀಡಲಾಗಿದ್ದು, ಸರ್ಕಾರಿ ಆಸ್ಪತ್ರೆಗಳಿಗೆ ಬರುವ ಬಡ ರೋಗಿಗಳಿಗೆ ಉಚಿತ ಬೆಳಗಿನ ಉಪಹಾರ ಒದಗಿಸುವ ಕಾರ್ಯವೂ ನಡೆದಿದೆ. ಶಿಕ್ಷಣ ಕ್ಷೇತ್ರದಲ್ಲಿಯೂ ಬಡ ವಿದ್ಯಾರ್ಥಿಗಳಿಗೆ ನೆರವು ನೀಡಲಾಗುತ್ತಿದೆ. ಉಚಿತ ಬಸ್ ಪಾಸ್ಗಳ ವಿತರಣೆ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ಗಳ ಕೊಡುಗೆ, ಶಾಲಾ-ಕಾಲೇಜು ಶುಲ್ಕ ಪಾವತಿಗೆ ನೆರವು ಸೇರಿದಂತೆ ಹಲವು ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಹಕಾರ ನೀಡಲಾಗಿದೆ. ಮಹಿಳೆಯರು ಸ್ವಾವಲಂಬಿಗಳಾಗಲು ಹೊಲಿಗೆ ಯಂತ್ರಗಳನ್ನು ವಿತರಿಸಿರುವುದು ಕೂಡ ಗಮನಾರ್ಹವಾಗಿದೆ. ಕೊರೊನಾ ಸಂಕಷ್ಟದಲ್ಲೂ ಮಾನವೀಯ ಸೇವೆ: ಕೊರೊನಾ ಮಹಾಮಾರಿಯ ಸಂದರ್ಭದಲ್ಲಿ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾಗ ಬಡ ಕುಟುಂಬಗಳಿಗೆ ಆಹಾರ ಕಿಟ್ಗಳನ್ನು ವಿತರಿಸುವ ಮೂಲಕ ನೆರವಾಗಿದ್ದಾರೆ. ಲಾಕ್ಡೌನ್ ಸಂದರ್ಭದಲ್ಲಿ ದುಡಿಯುವ ವರ್ಗದ ಜನರಿಗೆ ಆಹಾರದ ಸಮಸ್ಯೆ ಎದುರಾದಾಗ ಬಾಗೇಪಲ್ಲಿ, ಗುಡಿಬಂಡೆ ಮತ್ತು ಚೇಳೂರು ಭಾಗಗಳಲ್ಲಿ ಉಚಿತ ಊಟದ ವ್ಯವಸ್ಥೆ ಮಾಡಲಾಗಿತ್ತು.ಸೋಂಕಿತರ ಮನೆಗಳಿಗೆ ಭೇಟಿ ನೀಡಿ ಧೈರ್ಯ ತುಂಬುವುದು, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಸೇರಿದಂತೆ ಹಲವು ಮಾನವೀಯ ಕಾರ್ಯಗಳನ್ನು ಕೈಗೊಳ್ಳಲಾಗಿತ್ತು.
ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲೂ ನೆರವು: ದೇವಾಲಯ, ಮಸೀದಿ, ಚರ್ಚ್ ಸೇರಿದಂತೆ ವಿವಿಧ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿ ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೆ ನೆರವು ನೀಡುತ್ತಾ ಬಂದಿರುವ ಸುಬ್ಬಾರೆಡ್ಡಿಯವರು, ಅಂಗವಿಕಲರು, ಬಡ ವ್ಯಾಪಾರಸ್ಥರು ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೂ ವೈಯಕ್ತಿಕವಾಗಿ ಸಹಾಯ ಮಾಡಿದ್ದಾರೆ. ಸೇವೆಯ ಜೊತೆಗೆ ಕ್ಷೇತ್ರದ ಅಭಿವೃದ್ಧಿಗೂ ಒತ್ತು: ಸಾಮಾಜಿಕ ಸೇವೆಯ ಜೊತೆಗೆ ಕ್ಷೇತ್ರದ ಅಭಿವೃದ್ಧಿಗೂ ಆದ್ಯತೆ ನೀಡುತ್ತಿರುವ ಸುಬ್ಬಾರೆಡ್ಡಿಯವರು ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ ಸೇರಿದಂತೆ ಮೂಲಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಿದ್ದಾರೆ. ಕ್ಷೇತ್ರದಲ್ಲಿ ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತಿರುವ ಅವರು, ಪ್ರತಿ ಬುಧವಾರ ಜನತಾದರ್ಶನದ ಮೂಲಕ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸುತ್ತಿರುವುದು ವಿಶೇಷ.ರಾಜಕೀಯ ಟೀಕೆಗಳಿಗೆ ಪ್ರತಿಕ್ರಿಯಿಸುವುದಕ್ಕಿಂತ ಜನರ ಕೆಲಸ ಮಾಡುವುದೇ ಮುಖ್ಯ ಎಂಬ ನಿಲುವಿನೊಂದಿಗೆ ತಮ್ಮ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಅವರು, ಜನರ ಕಷ್ಟ-ಸುಖಗಳಲ್ಲಿ ಭಾಗಿಯಾಗುವ ಮೂಲಕ ಜನನಾಯಕನಾಗಿ ಗುರುತಿಸಿಕೊಂಡಿದ್ದಾರೆ.ಕಷ್ಟಪಟ್ಟು ಸಂಪಾದಿಸಿದ ಹಣದಲ್ಲಿ ಬಡವರಿಗೆ ನೆರವಾಗುವುದು ನನಗೆ ತೃಪ್ತಿ ನೀಡುತ್ತದೆ. ನನ್ನ ಸಹಾಯ ಸಮಾಜದ ಜನರಿಗೆ ಸದುಪಯೋಗವಾದರೆ ಅದೇ ನನಗೆ ದೊಡ್ಡ ಸಂತೋಷ ಎಂಬ ಅವರ ಮಾತುಗಳು ಅವರ ಸೇವಾ ಮನೋಭಾವವನ್ನು ಪ್ರತಿಬಿಂಬಿಸುತ್ತವೆ. ಬಡವರ ಮದುವೆಯಿಂದ ಹಿಡಿದು ಆರೋಗ್ಯ, ಶಿಕ್ಷಣ, ಆಹಾರ, ಉದ್ಯೋಗ ಹಾಗೂ ಮೂಲಸೌಕರ್ಯಗಳವರೆಗೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಎಸ್.ಎನ್. ಸುಬ್ಬಾರೆಡ್ಡಿಯವರ ಸಮಾಜಮುಖಿ ಕಾರ್ಯಗಳು ಬಾಗೇಪಲ್ಲಿ ಕ್ಷೇತ್ರದಲ್ಲಿ ಗಮನಾರ್ಹವಾಗಿವೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವುದು, ಸಂಕಷ್ಟದಲ್ಲಿರುವವರ ನೆರವಿಗೆ ಧಾವಿಸುವುದು ಮತ್ತು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವುದೇ ತಮ್ಮ ಧ್ಯೇಯ ಎಂಬ ಸಂದೇಶದೊಂದಿಗೆ ಅವರ ಸೇವಾ ಪಯಣ ಮುಂದುವರಿದಿದೆ.