ಬೆಂಗಳೂರು: ಸಚಿವ ಸಂಪುಟದಲ್ಲಿ ಸ್ಥಾನ ಸಿಗದ ಶಾಸಕರು ಇಂದೂ ಸಹ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವ ಕಾರ್ಯ ಮುಂದುವರಿದಿದೆ. ಇಂದೂ ಸಹ ಕೆಲ ಮಾಜಿ ಸಚಿವರು ಹಾಗೂ ಶಾಸಕರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಅವರ ಸದಾಶಿವನಗರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಮಾಜಿ ಸಚಿವರಾದ ಕೆ.ರಹೀಮ್ಖಾನ್, ಡಾ. ಎಂ.ಸಿ. ಸುಧಾಕರ್ ಹಾಗೂ ಶಾಸಕರಾದ ಪ್ರಕಾಶ್ ಕೋಳಿವಾಡ, ಎ.ಎಸ್. ಪೊನ್ನಣ್ಣ, ಮಹಾಂತೇಶ್ ಕೌಜಲಗಿ ಮತ್ತಿತರರು ತಮಗೆ ಸಚಿವ ಸ್ಥಾನ ನೀಡದಿದ್ದಕ್ಕೆ ತಮ್ಮ ಬೇಸರ ಹೊರ ಹಾಕಿದ್ದಾರೆ ಎಂದು ಹೇಳಲಾಗಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರು ಮುಂದಿನ ದಿನಗಳಲ್ಲಿ ನಿಮಗೆ ಒಳ್ಳೆಯ ಭವಿಷ್ಯವಿದೆ. ಪಕ್ಷದ ವರಿಷ್ಠರು ನಿಮ್ಮ ಕಾರ್ಯ ವೈಖರಿಗಳನ್ನು ಗಮನಿಸಿ ಸೂಕ್ತ ಸ್ಥಾನಮಾನ ನೀಡಲಿದ್ದಾರೆ ಎಂದು ಸಮಾಧಾನ ಪಡಿಸಿದರು ಎಂದು ತಿಳಿದುಬಂದಿದೆ. ಸಚಿವ ಪಿ.ಎಂ. ನರೇಂದ್ರಸ್ವಾಮಿ ಅವರು ಇಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಖಾತೆ ಹಂಚಿಕೆ ಸಂದರ್ಭದಲ್ಲಿ ತಮಗೆ ಇಂತಹ ಖಾತೆಯೇ ಬೇಕು ಎಂದು ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ.