ಕೆ.ಆರ್.ಪೇಟೆ: ತಾಲ್ಲೂಕಿನ ವಿಠಲಾಪುರ, ಅಂಬಿಗರಹಳ್ಳಿ, ಸಂಗಾಪುರ, ಯಗಚಗುಪ್ಪೆ, ಆಲಂಬಾಡಿ ಗ್ರಾಮಗಳಲ್ಲಿ ಶಾಸಕರ ಪ್ರದೇಶಾ ಭಿವೃದ್ಧಿ ನಿಧಿ ಅಡಿಯಲ್ಲಿ ನಿರ್ಮಿಸಲಾಗುತ್ತಿರುವ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಹೆಚ್.ಟಿ.ಮಂಜು ಭೂಮಿ ಪೂಜೆ ನೆರವೇರಿಸಿದರು.
ಶಾಸಕರು ಮಾತನಾಡಿ ಕರ್ನಾಟಕ ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ಅನುಧಾನ ನೀಡುವಲ್ಲಿಯೇ ಕಾಲ ಕಳೆಯುತ್ತಿದೆ. ಇತರೆ ಮೂಲ ಸೌಲಭ್ಯಗಳಿಗೆ ಅಗತ್ಯ ಅನುಧಾನವನ್ನೇ ನೀಡುತ್ತಿಲ್ಲ. ಕನಿಷ್ಠ ಪಕ್ಷ ಜನರ ಆರೋಗ್ಯ ಹಿತದೃಷ್ಠಿಯಿಂದ ಸರ್ಕಾರಿ ಆಸ್ಪತ್ರೆಗಳಿಗೆ ಮಾತ್ರೆಗಳು ಮತ್ತು ಇಂಜಕ್ಷನ್ ಗಳನ್ನೇ ಪೂರೈಕೆ ಮಾಡದೇ ಜನರ ಆರೋಗ್ಯದೊಂದಿಗೆ ಚೆಲ್ಲಾಟವಾಡುತ್ತಿದೆ. ಕಳೆದ ತಿಂಗಳು ಇಡೀ ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಯ ವೈದ್ಯರೇ ಇದರ ವಿರುದ್ದ ಹೋರಾಟ ಮಾಡಿದ್ದಾರೆ. ಸರ್ಕಾರ ಇನ್ನಾದರೂ ಗ್ಯಾರಂಟಿ ಯೋಜನೆಗಳ ಜೊತೆಗೆ ಸರ್ಕಾರಿ ಆಸ್ಪತ್ರೆಗಳಿಗೆ ಬರುವ ಬಡ ಜನರಿಗೆ ಅಗತ್ಯವಿರುವ ಮಾತ್ರೆಗಳು ಹಾಗೂ ಇಂಜಕ್ಷನ್ ಔಷಧಗಳನ್ನು ವಿತರಣೆ ಮಾಡಲು ಕ್ರಮ ವಹಿಸಬೇಕು. ಆಸ್ಪತ್ರೆಗಳಿಗೆ ಕನಿಷ್ಠ ಸಿಬ್ಬಂದಿ ವರ್ಗದವರನ್ನು ನೇಮಕ ಮಾಡಬೇಕು ಇಲ್ಲದಿದ್ದರೆ ಜನರೇ ಸರ್ಕಾರದ ವಿರುದ್ದ ದಂಗೆ ಏಳುವ ಕಾಲ ದೂರವಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ದ ಅಸಮಧಾನ ವ್ಯಕ್ತಪಡಿಸಿದರು.
ಸರ್ಕಾರವು ವಿರೋಧ ಪಕ್ಷಗಳ ಶಾಸಕರಿಗೆ ನೀಡುತ್ತಿರುವ ಅನುಧಾನವನ್ನು ಅಗತ್ಯ ಇರುವ ಗ್ರಾಮಗಳ ರಸ್ತೆ ಮತ್ತು ಚರಂಡಿ ಅಭಿವೃದ್ದಿಗೆ ಆದ್ಯತೆ ಮೇರೆಗೆ ನೀಡುವ ಮೂಲಕ ಮತ ನೀಡಿದ ಜನರ ಋಣ ತೀರಿಸುವ ಕೆಲಸ ಮಾಡುತ್ತಿದ್ದೇನೆ. ಆದರ ನನಗೆ ಈ ಅನುಧಾನ ಆನೆ ಹೊಟ್ಟಿಗೆ ಅರೆಕಾಸಿನ ಮಜ್ಜಿಗೆ ನೀಡಿದಂತಾಗಿದೆ ಹಾಗಾಗಿ 2028ಕ್ಕೆ ನಮ್ಮ ಜೆಡಿಎಸ್-ಬಿಜೆಪಿ ಮೈತ್ರಿ ಸರ್ಕಾರವು ಅಧಿಕಾರಕ್ಕೆ ಬರುವುದು ಶೇ.100ರಷ್ಟು ಸತ್ಯವಾಗಿದೆ ಆಗ ಮತ್ತೊಮ್ಮೆ ನನಗೆ ಆಶೀರ್ವಾದ ಮಾಡಿದರೆ ತಾಲ್ಲೂಕಿನ ಎಲ್ಲಾ ಜನರ ಸಮಗ್ರ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಹೆಚ್.ಟಿ.ಮಂಜು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ರಾಜ್ಯ ಯುವ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಕೆ.ಬಿ.ನಾಗೇಶ್, ಜೆಡಿಎಸ್ ಮುಖಂಡರಾದ ಸಂಗಾಪುರ ಪುಟ್ಟಸ್ವಾಮೀಗೌಡ, ಯಗಚಗುಪ್ಪೆ ಎಲ್.ಐ.ಸಿ ಶಿವಪ್ಪ, ತಾ.ಪಂ.ಮಾಜಿ ಸದಸ್ಯ ಬೂಕನಕೆರೆ ಹೆಳವೇಗೌಡ, ಆಲಂಬಾಡಿ ಕರಿಶೆಟ್ಟಿ, ವೆಂಕಟೇಶ್, ಚನ್ನಕೃಷ್ಣ, ತಾಲ್ಲೂಕು ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ರೇಖಾಲೋಕೇಶ್, ಅಕ್ಕಿಹೆಬ್ಬಾಳು ಹೋಬಳಿ ಜೆಡಿಎಸ್ ಅಧ್ಯಕ್ಷ ಮಂಚೀಬೀಡು ಬಸವಲಿಂಗಪ್ಪ, ಮಾಂಬಳ್ಳಿ ಕಾಂತರಾಜು, ಸೇರಿದಂತೆ ಹಲವಾರು ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.