ರಾಮನಗರ: ನಿಮ್ಮ ಮನೆ ಬಾಗಿಲಿಗೆ ಅಧಿಕಾರ ಬಂದಿದೆ. ಅದನ್ನು ನೀವು ಉಳಿಸಿಕೊಂಡು ನಮಗೆ ಹೆಚ್ಚಿನ ಶಕ್ತಿ ತುಂಬಬೇಕು. ಸಿಕ್ಕ ಅವಕಾಶದಲ್ಲಿ ನಿಮ್ಮ ಸೇವೆ ಮಾಡುತ್ತೇನೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷದವರೇ ಇರಲಿ ಪಕ್ಷಭೇದ ಮರೆತು ಒಗ್ಗಟ್ಟಾಗಿ ಕೆಲಸ ಮಾಡೋಣ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.ಶ್ರೀ ಚಾಮುಂಡೇಶ್ವರಿ ಅಮ್ಮನವರ ಕರಗ ಮಹೋತ್ಸವದ ಪ್ರಯುಕ್ತ ಮಂಗಳವಾರ ಸಂಜೆ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಮನಗರ ಕ್ಷೇತ್ರದಲ್ಲಿ ಬದಲಾವಣೆ ಕಾಣುವ ಆಸೆಯಿಂದ ನೀವೆಲ್ಲರು ನನಗೆ ಶಕ್ತಿ ತುಂಬಿದಿರಿ. ನಮ್ಮ ಸರ್ಕಾರ ಬಂದ ಮೇಲೆ ಇಲ್ಲಿವರೆಗೆ ರಾಮನಗರ ಕ್ಷೇತ್ರಕ್ಕೆ ಸುಮಾರು 2 ಸಾವಿರ ಕೋಟಿ ರುಪಾಯಿ ಅನುದಾನ ಒದಗಿಸಿ ವಿವಿಧ ಅಭಿವೃದ್ಧಿ ಕೆಲಸ ಮಾಡಿಕೊಂಡು ಬಂದಿದ್ದೇವೆ ಎಂದರು.ಈಗಾಗಲೇ ರಾಮನಗರ ಟೌನಿಗೆ ದಿನದ 24 ಗಂಟೆ ಕಾವೇರಿ ನೀರು ಒದಗಿಸಿದ್ದೇವೆ. ರಾಜೀವ್ ಗಾಂಧಿ ವಿವಿಗೆ 600 ಕೋಟಿ, ಅರ್ಕಾವತಿ ರಿವರ್ ಫ್ರಂಟ್ ಯೋಜನೆ 156 ಕೋಟಿ ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ಕೆಪಿಎಸ್ಸಿ ಶಾಲೆಗಳನ್ನು ತೆರೆಯಲಾಗುತ್ತಿದೆ. ಬಡವರಿಗೆ ನಿವೇಶನ ಕಲ್ಪಿಸಲು 300 ಎಕರೆ ಜಾಗ ಗುರುತಿಸಲಾಗಿದೆ. ಮುಂದಿನ ದಿನಗಳಲ್ಲಿ ಆಶ್ರಯ ಸಮಿತಿ ಸಭೆ ಮಾಡಿ ಬಡವರಿಗೆ ನಿವೇಶನ ವಿತರಿಸುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಚಾಮುಂಡೇಶ್ವರಿ ಕರಗ ಮಹೋತ್ಸವಕ್ಕೆ ಆಗಮಿಸಿದ್ದೇನೆ. ಎಲ್ಲ ಜಾತಿ ಧರ್ಮದವರು ಸೌಹಾರ್ದತೆಯಿಂದ ಬದುಕು ಬೇಕೆಂದು ಕರಗ ಮಹೋತ್ಸವ ಆಯೋಜನೆ ಮಾಡಲಾಗಿದೆ .ನಿಮ್ಮೆಲ್ಲರ ಆಶೀರ್ವಾದದಿಂದ ಆ ಸ್ಥಾನ ಸಿಕ್ಕಿದೆ. ನನಗೆ ನಿಮ್ಮ ನೆಮ್ಮದಿ, ಸಂತೋಷದ ಬದುಕು ಮುಖ್ಯ. ನಿಮ್ಮೆಲ್ಲರ ಪ್ರಾರ್ಥನೆಯಿಂದ ಸೇವೆ ಮಾಡುವ ಅವಕಾಶ ಸಿಕ್ಕಿದೆ. ನನಗೆ ಒಳ್ಳೆಯದಾಗಬೇಕೆಂದು ಪ್ರತಿಯೊಬ್ಬರು ಪ್ರಾರ್ಥನೆ ಮಾಡಿದ್ದೀರಿ. ನಿಮಗೆಲ್ಲ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಡಿಕೆಶಿ ಹೇಳಿದರು.ಶಾಸಕ ಇಕ್ಬಾಲ್ ಹುಸೇನ್ ಮಾತನಾಡಿ, ನೀವು ಕೊಟ್ಟ ಶಕ್ತಿಯಿಂದ ಮೈಸೂರು ದಸರಾ ಮಾದರಿಯಲ್ಲಿಯೇ ಬಹಳ ಭಕ್ತಿ, ಸಂತೋಷದಿಂದ, ಪಕ್ಷಾತೀತ, ಜಾತ್ಯತೀತವಾಗಿ ಚಾಮುಂಡೇಶ್ವರಿ ದೇವಿ ಕರಗ ಮಹೋತ್ಸವ ಆಚರಿಸುತ್ತಿದ್ದೇವೆ. ಈ ಜಿಲ್ಲೆಯ ಮಣ್ಣಿನ ಮಗ ರಾಜ್ಯ ಚುಕ್ಕಾಣಿ ಹಿಡಿಯಬೇಕಂಬುದು ಜನರ ಆಸೆಯಾಗಿತ್ತು.ತಾಯಿಯ ಆಶೀರ್ವಾದ ದಿಂದಾಗಿ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಒಲಿದಿದೆ ಎಂದು ಹೇಳಿದರು. ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ರಾಜ್ಯಾಧ್ಯಕ್ಷ ಎಚ್.ಎಂ.ರೇವಣ್ಣ, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಉದಯ್ , ವಿಧಾನ ಪರಿಷತ್ ಸದಸ್ಯರಾದ ಎಸ್.ರವಿ, ರಾಮೋಜಿಗೌಡ, ಸುಧಾಮ್ ದಾಸ್, ಮಾಜಿ ಶಾಸಕ ಎಂ.ಸಿ.ಅಶ್ವತ್ಥ್ , ಬಿಎಂಐಸಿಪಿ ಅಧ್ಯಕ್ಷ ರಘುನಂದನ್ ರಾಮಣ್ಣ, ಮುಖಂಡ ದುಂತೂರು ವಿಶ್ವನಾಥ್ ಮತ್ತಿತರರು ಉಪಸ್ಥಿತರಿದ್ದರು.