ಕೋಲಾರ: ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನ ಭುಗಿಲೆದ್ದಿದೆ. ಈ ಮಧ್ಯೆ ಅವರ ಮನವೊಲಿಸುವ ಕಾರ್ಯ ಕೂಡ ತೆರೆಮರೆಯಲ್ಲಿ ನಡೆಯುತ್ತಿದೆ. ಈ ಬೆನ್ನಲ್ಲೆ ಇಂದು ಬಂಗಾರಪೇಟೆ ಬಂದ್ಗೆ ಕಾಂಗ್ರೆಸ್ ಮುಖಂಡರು ಹಾಗೂ ವಿವಿಧ ಸಂಘಟನೆಗಳು ಮುಂದಾಗಿದ್ದಾರೆ. ಇತ್ತ ಹಾವೇರಿ ಜಿಲ್ಲೆ ಬ್ಯಾಡಗಿ ಶಾಸಕ ಬಸವರಾಜ್ ಶಿವಣ್ಣನವರ್ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಇಂದು ಬೃಹತ್ ಪ್ರತಿಭಟನೆಗೆ ಬೆಂಬಲಿಗರು ಮುಂದಾಗಿದ್ದಾರೆ.ಡಿ.ಕೆ.ಶಿವಕಮಾರ್ ಕ್ಯಾಬಿನೆಟ್ ವಿಸ್ತರಣೆ ಬಳಿಕ ಸಚಿವಾಕಾಂಕ್ಷಿಗಳ ಅಸಮಾಧಾನದ ಬೇಗುದಿ ಕೆಂಡವಾಗಿ ಧಗಧಗಿಸುತ್ತಿದೆ. ಒಂದಷ್ಟು ಅಸಮಾಧಾನಿತ ಶಾಸಕರ ಮನವೊಲಿಕೆ ಕಸರತ್ತು ಯಶ ಕಂಡರೆ, ಇನ್ನೂ ಕೆಲ ಶಾಸಕರ ಅಸಮಾಧಾನ ತಣಿಸುವ ಕಾರ್ಯ ಮುಂದುವರಿದಿದೆ. ಡಿಕೆ ಕ್ಯಾಬಿನೆಟ್ನಲ್ಲಿ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಪ್ರಾತಿನಿಧ್ಯ ಸಿಗದಿದ್ದಕ್ಕೆ ಶಾಸಕರು ಭಿನ್ನಮತ ಸಾರಿದ್ದಾರೆ. ಆಕ್ರೋಶದ ಜ್ವಾಲೆ ಕಾರಿದ್ದಾರೆ. ಬೆಂಬಲಿಗರ ಬೇಗುದಿ ತಾರಕಕ್ಕೇರಿದೆ.ನಿನ್ನೆ ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಬೆಂಬಲಿಗರು ಮೂರು ತಾಲೂಕುಗಳನ್ನ ಬಂದ್ ಮಾಡಿ ಆಕ್ರೋಶ ಹೊರಹಾಕಿದ್ದರು. ಇದೀಗ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಬೆಂಬಲಿಗರು ಇಂದು ಬಂಗಾರಪೇಟೆ ಬಂದ್ಗೆ ಕರೆ ಕೊಟ್ಟಿದ್ದಾರೆ.
ಬಂಗಾರಪೇಟೆ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಾರೆಡ್ಡಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಇಂದು ಬಂಗಾರಪೇಟೆ ಬಂದ್ಗೆ ನಿರ್ಧರಿಸಲಾಗಿದೆ. ಬಲಗೈ ಸಮುದಾಯಕ್ಕೆ ಸೇರಿದ ಎಸ್.ಎನ್.ನಾರಾಯಣಸ್ವಾಮಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರೂ ಸಂಪುಟದಲ್ಲಿ ಅವಕಾಶ ನೀಡದೆ ಹೈಕಮಾಂಡ್ ಅನ್ಯಾಯ ಮಾಡಿದೆ. 2013, 2018 ಮತ್ತು 2023ರಲ್ಲಿ ಕಾಂಗ್ರೆಸ್ ಶಾಸಕರಾಗಿ ನಾರಾಯಣಸ್ವಾಮಿ ಆಯ್ಕೆಯಾಗಿದ್ದಾರೆ. ಜಿಲ್ಲೆಯಲ್ಲಿ ನಾಲ್ಕು ಕಾಂಗ್ರೆಸ್ ಶಾಸಕರು ಇದ್ದರೂ ಯಾರಿಗೂ ಸಚಿವ ಸ್ಥಾನ ನೀಡದೆ ಬೇಸರ ಮೂಡಿಸಿದೆ. ಈ ಹಿನ್ನಲೆಯಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಸಂಪೂರ್ಣ ಬಂದ್ ಮಾಡಲು ನಿರ್ಧರಿಸಲಾಗಿದೆ. ಬಂಗಾರಪೇಟೆ ಬಂದ್ಗೆ ದಲಿತ ಸಂಘಟನೆಗಳು, ವರ್ತಕರ ಸಂಘ, ಆಟೋ ಚಾಲಕರ ಸಂಘ, ರೈತ ಸಂಘ ಸೇರಿದಂತೆ ಹಲವು ಪ್ರಗತಿಪರ ಸಂಘಟನೆಗಳು ಬೆಂಬಲ ಸೂಚಿಸಿವೆ. ಬಸ್ ಸಂಚಾರ ಹಾಗೂ ಆಟೋ ಸಂಚಾರ ಕೂಡ ಸ್ಥಗಿತವಾಗುವ ಸಾಧ್ಯತೆ ಇದೆ. ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು ಬಂದ್ ಪರಿಸ್ಥಿತಿ ಅನುಗುಣವಾಗಿ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಅಗತ್ಯ ವಸ್ತುಗಳನ್ನು ಬಿಟ್ಟು ಉಳಿದಂತೆ ಎಲ್ಲ ಬಂದ್ ಮಾಡಲು ಮುಖಂಡರು ನಿರ್ಧಾರಿಸಿದ್ದಾರೆ. ಬೆಳಗ್ಗೆ 11 ಗಂಟೆಗೆ ಬಂಗಾರಪೇಟೆಯ ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಮಾಡಿ ರ್ಯಾಲಿ ಕೈಗೊಳ್ಳಲಿದ್ದಾರೆ.