ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಶಾಸಕರೊಡಗೂಡಿ ವಿಧಾನಸೌಧ ಮುತ್ತಿಗೆಗೆ ಯತ್ನಿಸಿದ ಘಟನೆ ನಡೆಯಿತು. ಸೋಮವಾರ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ವಿರೋಧ ಪಕ್ಷದ ಪ್ರಮುಖ ನಾಯಕರನ್ನು ಪೊಲೀಸರು ತಡೆದು ವಶಕ್ಕೆ ಪಡೆದ ಘಟನೆ ನಡೆಯಿತು. ಬೆಳಗ್ಗೆ 10 ಗಂಟೆಗೆ ಫ್ರೀಡಂ ಪಾರ್ಕ್ನಲ್ಲಿ ಸಮಾವೇಶಗೊಂಡ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ವಿಧಾನಸೌಧ ಚಲೋ ಆರಂಭವಾಯಿತು.ಪ್ರತಿಭಟನೆಯ ಹಿನ್ನೆಲೆಯಲ್ಲಿ ವಿಧಾನಸೌಧ ಹಾಗೂ ವಿಕಾಸಸೌಧದ ಸುತ್ತಮುತ್ತ ಬ್ಯಾರಿಕೇಡ್ ಅಳವಡಿಸಿ ಪ್ರವೇಶ ದ್ವಾರಗಳನ್ನು ಮುಚ್ಚಲಾಗಿತ್ತು. ಕೆಎಸ್ಆರ್ಪಿ ತುಕಡಿಗಳು ಹಾಗೂ ಪ್ರತಿಭಟನಾಕಾರರನ್ನು ಕರೆದೊಯ್ಯಲು ಬಿಎಂಟಿಸಿ ಬಸ್ಗಳನ್ನು ನಿಯೋಜಿಸಲಾಗಿತ್ತು.
ಸಚಿವ ನಾಗೇಂದ್ರ ಅವರ ತಕ್ಷಣದ ರಾಜೀನಾಮೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್ನಲ್ಲಿ ಧರಣಿ ನಿರತರಾಗಿದ್ದ ಪ್ರತಿಭಟನಾಕಾರರು, ಯೋಜನೆಯಂತೆ ಮೂರು ತಂಡಗಳಾಗಿ ವಿಂಗಡಣೆಯಾಗಿ ವಿಧಾನಸೌಧ ಮುತ್ತಿಗೆಗೆ ಮುಂದಾಗಿದ್ದರು. ಒಂದು ತಂಡ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ಮುಂದುವರಿಸಿದರೆ, ಇನ್ನುಳಿದ ಎರಡು ತಂಡಗಳು ವಿಧಾನಸೌಧದ ಪ್ರಮುಖ ಗೇಟ್ಗಳತ್ತ ನುಗ್ಗಲು ಯತ್ನಿಸಿದವು. ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಪ್ರತಿಭಟನಾಕಾರರನ್ನು ಕೊಂಡೊಯ್ಯಲು ಬಿಎಂಟಿಸಿ ಬಸ್ಗಳನ್ನು ಸ್ಥಳದಲ್ಲಿ ಕಾಯ್ದಿರಿಸಲಾಗಿತ್ತು.ಮೇಲ್ಮನೆ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ``ವಾಲ್ಮೀಕಿ ಸಮುದಾಯಕ್ಕೆ ಸೇರಬೇಕಿದ್ದ 187 ಕೋಟಿ ರೂ. ಹಣವನ್ನು ಲೂಟಿ ಮಾಡಿ ಬೇರೆಡೆ ಹಂಚಲಾಗಿದೆ.