ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಉನ್ನತ ಮಟ್ಟದ ಸಮಿತಿಯನ್ನು ರಚಿಸಲು ಪಕ್ಷದ ವರಿಷ್ಠರು ಚಿಂತನೆ ನಡೆಸಿದ್ದಾರೆ.
ರಾಜ್ಯದಲ್ಲಿ ಪಕ್ಷದ ಅಧಿಕಾರದಲ್ಲಿದ್ದರೂ ಸರ್ಕಾರದ ವತಿಯಿಂದ ನಡೆಯುತ್ತಿರುವ ಕಾರ್ಯಕ್ರಮಗಳ ಬಗ್ಗೆ ಸಾಕಷ್ಟು ಮಾಹಿತಿ ದೊರಕುತ್ತಿಲ್ಲ. ಪಕ್ಷ ಹಾಗೂ ಸರ್ಕಾರದ ನಡುವೆ ತಾಳಮೇಳವಿಲ್ಲದೆ ಸಮನ್ವಯ ಇಲ್ಲದಂತಾಗಿದೆ. ಎಷ್ಟೋ ಬಾರಿ ಸರ್ಕಾರ ಹಮ್ಮಿಕೊಂಡ ಕಾರ್ಯಕ್ರಮಗಳು ಪಕ್ಷದ ಗಮನಕ್ಕೆ ಬರುತ್ತಿಲ್ಲ. ಕೆಲವರು ಏಕಪಕ್ಷೀಯ ನೀರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂಬ ಹಿನ್ನೆಲೆಯಲ್ಲಿ ಈ ಸಂಬಂಧ ಹಿರಿಯರು ಮತ್ತು ಮುಖಂಡರು ಇರುವ ರಾಜಕೀಯ ವ್ಯವಹಾರಗಳ ಸಮಿತಿಯನ್ನು ರಚಿಸಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಹೈಕಮಾಂಡ್ ನಾಯಕರಿಗೆ ತಿಳಿಸಿದ್ದ ಹಲವು ವಿಷಯಗಳ ಹಿನ್ನೆಲೆಯಲ್ಲಿ ಈ ಸಮಿತಿಯನ್ನು ಅಸ್ಥಿತ್ವಕ್ಕೆ ತರಲು ಚಿಂತನೆ ನಡೆದಿದೆ ಎನ್ನಲಾಗಿದೆ. ಸುಮಾರು 25ರಿಂದ 30ಜನರಿರುವ ಸಮಿತಿಯನ್ನು ರಚಿಸಿ ಈ ಸಮಿತಿಯು ಸಭೆ ಸೇರಿ ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಿ ಒಮ್ಮತದ ತೀರ್ಮಾನಕೈಗೊಂಡ ನಂತರ ಆ ನಿರ್ಧಾರಗಳಂತೆ ಕಾರ್ಯ ನಿರ್ವಹಿಸಲು ಸಂಬAಧಪಟ್ಟವರಿಗೆ ಸೂಚನೆ ನೀಡಲಾಗುವುದು. ಈ ಸಭೆಯಲ್ಲಿ ಜಿಲ್ಲಾಮಟ್ಟದ ಪ್ರಮುಖ ವಿಷಯಗಳು ಸೇರಿದಂತೆ ಚುನಾವಣೆಗಳು ಎದುರಾದಾಗ ಪಕ್ಷದ ಅಭ್ಯರ್ಥಿಗಳ ಆಯ್ಕೆ ಬಗ್ಗೆಯೂ ಸಮಾಲೋಚಿಸಿ ತೀರ್ಮಾನಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.