ನವದೆಹಲಿ: ಆಮ್ ಆದ್ಮಿ ಪಕ್ಷದ ಶಾಸಕರನ್ನು ಖರೀದಿಸಲು ಭಾರತೀಯ ಜನತಾ ಪಕ್ಷ ಯತ್ನಿಸುತ್ತಿದೆ ಎಂಬ ಆರೋಪದ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸಕ್ಕೆ ದೆಹಲಿ ಪೊಲೀಸ್ ಅಪರಾಧ ದಳ ಇಂದು ಬೆಳಿಗ್ಗೆ ನೋಟಿಸ್ ನೀಡಲು ತೆರಳಿದೆ.
ಉತ್ತರ ದೆಹಲಿಯ ಸಿವಿಲ್ ಲೈನ್ಸ್ ಪ್ರದೇಶದಲ್ಲಿರುವ ಮುಖ್ಯಂತ್ರಿಯವರ ಅಧಿಕೃತ ನಿವಾಸಕ್ಕೆ ದೆಹಲಿ ಪೊಲೀಸ್ ಸಹಾಯಕ ಆಯುಕ್ತ ದರ್ಜೆಯ ಅಧಿಕಾರಿಯ ನೇತೃತ್ವದ ತಂಡವು ತೆರಳಿದೆ ಎಂದು ಹೇಳಲಾಗಿದೆ.ದೆಹಲಿ ಪೊಲೀಸ್ ಅಪರಾಧ ದಳ, ಶುಕ್ರವಾರ ಸಂಜೆಯೂ ಕೇಜ್ರಿವಾಲ್ ನಿವಾಸಕ್ಕೆ ಭೇಟಿ ಕೊಟ್ಟಿತ್ತು. ಆದರೆ ಕೇಜ್ರಿವಾಲ್ ನಿವಾಸದ ಅಧಿಕಾರಿಗಳು ಅದನ್ನು ಸ್ವೀಕರಿಸಲು ನಿರಾಕರಿಸಿದ್ದರಿಂದ ನೋಟಿಸ್ ನೀಡಲು ಸಾಧ್ಯವಾಗಲಿಲ್ಲ ಎಂದು ಮೂಲಗಳು ತಿಳಿಸಿವೆ.
ತಮ್ಮ ಪಕ್ಷದ 7 ಶಾಸಕರಿಗೆ ತಲಾ 25 ಕೋಟಿ ರೂಪಾಯಿ ಆಮಿಷವೊಡ್ಡಿ ಬಿಜೆಪಿ ತನ್ನತ್ತ ಸೆಳೆಯಲು ಯತ್ನಿಸಿತ್ತು ಎಂದು ಕೇಜ್ರಿವಾಲ್ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಆರೋಪದ ಬಗ್ಗೆ ಪೊಲೀಸರಿಗೆ ದೂರು ನೀಡಿತ್ತು. ಕೇಜ್ರೀವಾಲ್ ಮಾಡಿರುವ ಆರೋಪಕ್ಕೆ ಸಂಬಂಧಪಟ್ಟಂತೆ ಸಾಕ್ಷಾಧಾರ ಒದಗಿಸಲು ದೆಹಲಿ ಪೊಲೀಸರು ಅವರಿಗೆ ನೋಟಿಸ್ ನೀಡಿದ್ದಾರೆ.