ಭಾಗ್ಯನಗರ: ರಾಷ್ಟ್ರೀಯ ಹೆದ್ದಾರಿ-44ರ ಗಂಗೋತ್ರಿ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಜನ ಮಹಿಳೆಯರು ಸೇರಿದಂತೆ ಏಳು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ.ಬೆಂಗಳೂರು ಕಡೆಯಿಂದ ಹೈದರಾಬಾದ್ ಕಡೆಗೆ ತೆರಳುತ್ತಿದ್ದ ಥಾರ್ ವಾಹನವು ಕೂಲಿ ಕಾರ್ಮಿಕರನ್ನು ಸಾಗಿಸುತ್ತಿದ್ದ ಅಪೇ ಆಟೋಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಟೋ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್ಗೆ ಗುದ್ದಿದ ಪರಿಣಾಮ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಘಟನಾ ಸ್ಥಳದಲ್ಲೇ ಐವರು, ಚಿಕ್ಕಬಳ್ಳಾಪುರ ಆಸ್ಪತ್ರೆಯಲ್ಲಿ ಒಬ್ಬರು, ಬೆಂಗಳೂರಿನ ಆಸ್ಪತ್ರೆಯಲ್ಲಿ ಒಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರನ್ನು ಬಾಗೇಪಲ್ಲಿ ಪಟ್ಟಣದ ನಿವಾಸಿಗಳಾದ ಉಮಾದೇವಿ (55), ವಿಜಯ (45), ಲಕ್ಷ÷್ಮಮ್ಮ (50), ಸರೋಜಮ್ಮ (65), ರಾಜಮ್ಮ, ಅರುಣ ಹಾಗೂ ತಾಲ್ಲೂಕಿನ ಸದ್ದುಪಲ್ಲಿ ಗ್ರಾಮದ ಅಂಜಿನಪ್ಪ (35) ಎಂದು ಗುರುತಿಸಲಾಗಿದೆ.ಆಟೋದಲ್ಲಿ ಚಾಲಕ ಸೇರಿದಂತೆ ಒಟ್ಟು 10 ಮಂದಿ ಪ್ರಯಾಣಿಸುತ್ತಿದ್ದರು. ಇವರೆಲ್ಲರೂ ಕೂಲಿ ಕೆಲಸಕ್ಕೆ ತೆರಳಿ ವಾಪಸ್ಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಗೆ ಆಟೋ ಸಂಪೂರ್ಣ ಜಖಂಗೊAಡಿದ್ದು, ಪ್ರಯಾಣಿಕರು ವಾಹನದೊಳಗೆ ಸಿಲುಕಿಕೊಂಡಿದ್ದರು. ಸ್ಥಳೀಯರು ಹಾಗೂ ಪೊಲೀಸರು ತಕ್ಷಣ ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಹೊರತೆಗೆದರು.
ಅಪಘಾತದಲ್ಲಿ ಗಾಯಗೊಂಡಿರುವ ಗಂಗಾದೇವಿ, ಲಕ್ಷ್ಮೀದೇವಿ, ರತ್ನಮ್ಮ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.ಸ್ಥಳಕ್ಕೆ ಹಿರಿಯ ಅಧಿಕಾರಿಗಳ ಭೇಟಿ: ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು, ಬಾಗೇಪಲ್ಲಿ ಠಾಣೆ ಪೊಲೀಸರು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತದ ನಿಖರ ಕಾರಣಗಳ ಕುರಿತು ಮಾಹಿತಿ ಸಂಗ್ರಹಿಸಿ ತನಿಖೆ ಆರಂಭಿಸಲಾಗಿದೆ.ಆಸ್ಪತ್ರೆಯಲ್ಲಿ ಶೋಕದ ವಾತಾವರಣ: ಮೃತದೇಹಗಳನ್ನು ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಸುದ್ದಿ ತಿಳಿದು ಆಗಮಿಸಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟುವಂತಿತ್ತು. ಒಂದೇ ಪ್ರದೇಶದ ಕೂಲಿ ಕಾರ್ಮಿಕರು ದುರ್ಘಟನೆಯಲ್ಲಿ ಮೃತಪಟ್ಟಿರುವುದು ಸ್ಥಳೀಯರಲ್ಲಿ ತೀವ್ರ ದುಃಖವನ್ನುಂಟು ಮಾಡಿದೆ.ಸಂಚಾರ ಅಸ್ತವ್ಯಸ್ತ: ಅಪಘಾತದ ಪರಿಣಾಮ ರಾಷ್ಟ್ರೀಯ ಹೆದ್ದಾರಿ-44ರಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಬಳಿಕ ಪೊಲೀಸರು ಹಾಗೂ ಹೆದ್ದಾರಿ ಸಿಬ್ಬಂದಿ ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಿದರು.ದುಡಿಯುವ ವರ್ಗದ ಹತ್ತು ಮಂದಿ ಪ್ರಯಾಣಿಸುತ್ತಿದ್ದ ಆಟೋ ಕ್ಷಣಾರ್ಧದಲ್ಲಿ ದುರಂತಕ್ಕೀಡಾಗಿ ಐದು ಅಮೂಲ್ಯ ಜೀವಗಳನ್ನು ಬಲಿ ಪಡೆದಿರುವ ಈ ಘಟನೆ ಬಾಗೇಪಲ್ಲಿ ತಾಲ್ಲೂಕಿನ ಜನರನ್ನು ಬೆಚ್ಚಿಬೀಳಿಸಿದೆ. ಪ್ರಕರಣ ದಾಖಲಿಸಿಕೊಂಡಿರುವ ಬಾಗೇಪಲ್ಲಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಶಾಸಕರ ಭೇಟಿ: ಮಾಹಿತಿ ಪಡೆದ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಬಾಗೇಪಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಸಂತಾಪ ಸೂಚಿಸಿ, ವೈಯುಕ್ತಿಕವಾಗಿ 25,000 ಹಾಗೂ ಸರ್ಕಾರದ ಗಮನಕ್ಕೆ ತಂದು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ: ಆರು ಮಹಿಳೆಯರು ಸೇರಿ ಏಳು ಬಲಿ



