ಮೈಸೂರು / ಹುಬ್ಬಳ್ಳಿ: ದೆಹಲಿಯ ಕಿಸಾನ್ ಮೋರ್ಚಾ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮತ್ತು ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ಕರ್ನಾಟಕದ 70 ಮಂದಿ ರೈತರನ್ನು ಮಧ್ಯ ಪ್ರದೇಶದ ಭೋಪಾಲ್ನಲ್ಲಿ ಪೊಲೀಸರು ಇಂದು ವಶಕ್ಕೆ ಪಡೆದಿದ್ದಾರೆ. ಧಾರವಾಡ ಜಿಲ್ಲೆಯ 16 ರೈತರು ಕೂಡ ಇದರಲ್ಲಿ ಸೇರಿದ್ದಾರೆ.
ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರೈತರು ದೆಹಲಿಗೆ ತೆರಳುತ್ತಿದ್ದರು.
ದೆಹಲಿಯ ಜಂತರ್ಮಂತರ್ನಲ್ಲಿ ನಾಳೆ ಕಿಸಾನ್ ಮೋರ್ಚಾ ವತಿಯಿಂದ ಕಾರ್ಯಕ್ರಮ ಹಾಗೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಭಾಗವಹಿಸುವುದಕ್ಕಾಗಿ ರಾಜ್ಯದ ರೈತರು ನಿಜಾಮುದ್ದೀನ್ ಎಕ್ಸಪ್ರೆಸ್ ರೈಲು ಮೂಲಕ ತೆರಳುತ್ತಿದ್ದರು.
ಸದ್ಯ ವಶಕ್ಕೆ ಪಡೆಯಲಾಗಿರುವ ರೈತರನ್ನು ಕಲ್ಯಾಣ ಮಂಟಪವೊಂದರಲ್ಲಿ ಇರಿಸಿಕೊಳ್ಳಲಾಗಿದೆ. ಅಲ್ಲಿಯೇ `ರೈತ ವಿರೋಧಿ ಮಧ್ಯಪ್ರದೇಶ ಪೊಲೀಸರಿಗೆ ಧಿಕ್ಕಾರ’ ಎಂದು ಘೋಷಣೆ ಕೂಗಿ ರತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧವೂ ಘೋಷಣೆಗಳನ್ನು ಕೂಗಿದ್ದಾರೆ.