ಬೆಳಗಾವಿ: ಬೆಳಗಾವಿ ತಾಲ್ಲೂಕಿನ ವಂಟಮೂರಿ ಗ್ರಾಮದಲ್ಲಿ ಮೊನ್ನೆ ರಾತ್ರಿ ನಡೆದ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಘಟನೆ ಪ್ರಸ್ತಾಪವಾಗಿ ಆರೋಪಿಗಳ ವಿರುದ್ಧ ಸೂಕ್ತಕ್ರಮ ಜರುಗಿಸುವ ಭರವಸೆ ಸರ್ಕಾರದಿಂದ ದೊರೆಯಿತು.ಬಿಜೆಪಿಯ ಸುನೀಲ್ಕುಮಾರ್ ವಿಷಯ ಪ್ರಸ್ತಾಪಿಸಿ ವಂಟಮೂರಿ ಗ್ರಾಮದಲ್ಲಿ ನಡೆದಿರುವ ಘಟನೆ ಒಂದು ಅಮಾನವೀಯವಾದುದು.
ಈ ಬಗ್ಗೆ ಸರ್ಕಾರ ಪರಿಶೀಲಿಸಿ ಇಂತಹ ಘಟನೆ ಮರುಕಳಿಸದಂತೆ ಸೂಕ್ತ ಕ್ರಮ ಜರುಗಿಸಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.ಸುನೀಲ್ ಕುಮಾರ್ ಅವರ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿ ಉತ್ತರ ನೀಡಿದ ಗೃಹಸಚಿವ ಡಾ. ಜಿ.ಪರಮೇಶ್ವರ್ ಅವರು, ವಂಟಮೂರಿ ಗ್ರಾಮದಲ್ಲಿ ನಡೆದ ಘಟನೆ ಸಂಬಂಧ ತಾವು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಸಂ ಬಂಧಪಟ್ಟವರಿಂದ ಮಾಹಿತಿ ಪಡೆದಿದ್ದೇನೆ. ನಾಗರೀಕ ಸಮಾಜ, ತಲೆ ತಗ್ಗಿಸುವಂತಹ ಘಟನೆ ಇದಾಗಿದೆ.
ಓರ್ವ ಯುವಕ-ಯುವತಿ ಪರಸ್ಪರ ಪ್ರೀತಿಸುತ್ತಿದ್ದು ಗ್ರಾಮದಿಂದ ಓಡಿಹೋಗಿದ್ದಕ್ಕೆ ಯುವಕನ ತಾಯಿಯನ್ನು ಅಮಾನುಷವಾಗಿ ನಡೆಸಿಕೊಂಡು ಹಲ್ಲೆ ನಡೆಸಿ ಹಿಂಸಿಸಲಾಗಿದೆ ಎಂದು ತಿಳಿದುಬಂದಿದೆ. ಈ ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಆರೋಪಿಗಳ ಪೈಕಿ ಕೆಲವರನ್ನು ಬಂಧಿಸಲಾಗಿದೆ. ಆರೋಪಿಗಳಿಗೆ ಶಿಕ್ಷೆಯಾಗುವಂತೆ ಸರ್ಕಾರ ಕ್ರಮವಹಿಸಲಿದೆ. ನೊಂದ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ರಕ್ಷಣೆ ನೀಡುವುದಾಗಿ ಪರಮೇಶ್ವರ್ ಭರವಸೆ ವ್ಯಕ್ತಪಡಿಸಿದ್ದಾರೆ.
ಡಾ.ಜಿ.ವೈ.ಪದ್ಮನಾಗರಾಜು