ನಮ್ಮನ್ನು ಪಿತೂರಿಯಿಂದ ಸೋಲಿಸಲು ಸಾಧ್ಯವಿಲ್ಲ, ದ್ವೇಷದಿಂದ ಕುಗ್ಗಿಸಲು ಸಾಧ್ಯವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಿಜೆಪಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಧರಣಿ ವೇಳೆ ಮಾಧ್ಯಮಗಳೊಂದಿಗೆ ಡಿಕೆ.ಶಿವಕುಮಾರ್ ಅವರು ಮಾತನಾಡಿದರು.
ನ್ಯಾಷನಲ್ ಹೆರಾಲ್ಡ್ ಈ ದೇಶದ ಆಸ್ತಿ. ದ್ವೇಷ ರಾಜಕಾರಣ ಬಿಜೆಪಿ ಆಸ್ತಿ. ಸತ್ಯಕ್ಕೆ ಸಾವಿಲ್ಲ, ಸುಳ್ಳು ಕೇಸ್ಗಳಿಗೆ ಆಯುಷ್ಯವಿಲ್ಲ ಎಂಬುದಕ್ಕೆ ಮಂಗಳವಾರ ಬಂದ ನ್ಯಾಯಾಲಯದ ಆದೇಶವೇ ಸಾಕ್ಷಿ. ಸತ್ಯ ಮೇವ ಜಯತೆ, ಬಿಜೆಪಿಗಿಲ್ಲ ಘನತೆ. ನಮ್ಮನ್ನು ಪಿತೂರಿಯಿಂದ ಸೋಲಿಸಲು ಸಾಧ್ಯವಿಲ್ಲ, ದ್ವೇಷದಿಂದ ಕುಗ್ಗಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಬಿಜೆಪಿ ಎಷ್ಟೇ ಪಿತೂರಿ ಮಾಡಿದರೂ ನಮಗೆ ನ್ಯಾಯ ಸಿಕ್ಕಿದೆ. ಬಿಜೆಪಿ ಎಂದರೆ ಬುರುಡೆ ಜನತಾ ಪಕ್ಷವಾಗಿದೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಜೈಲಿಗೆ ಹಾಕಲು ಪಿತೂರಿ ಮಾಡಲಾಗಿದೆ. ಈ ದ್ವೇಷ ರಾಜಕಾರಣ ಇಲ್ಲಿಗೆ ಕೊನೆಯಾಗಬೇಕು. ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಈ ಪ್ರತಿಭಟನೆ ಮುಂದುವರಿಯಲಿದೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಜತೆ ನಿಂತು ಅವರ ಕೈ ಬಲಪಡಿಸೋಣ ಎಂದು ಕರೆ ನೀಡಿದರು.
ಇಂದು ಸತ್ಯಕ್ಕೆ ಜಯ ಸಿಕ್ಕಿದೆ. 1937ರಲ್ಲಿ ನಮ್ಮ ನಾಯಕರಾಗಿದ್ದ ಜವಹಾರ್ ಲಾಲ್ ನೆಹರು ಅವರು ಜನರ ಧ್ವನಿಯಾಗಬೇಕು ಎಂದು ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಆರಂಭಿಸಿದರು. ಆ ಮೂಲಕ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ನೆರವಾಗಲು ಈ ಸಂಸ್ಥೆ ಆರಂಭಿಸಿದರು. ಈ ಸಂಸ್ಥೆ ಮಹಾತ್ಮಾ ಗಾಂಧಿ ಅಥವಾ ನೆಹರು ಅವರ ಆಸ್ತಿಯಲ್ಲ. ಇದು ಕಾಂಗ್ರೆಸ್ ಪಕ್ಷದ ಆಸ್ತಿ.
ಕಾಂಗ್ರೆಸ್ ಪಕ್ಷದಲ್ಲಿ ಯಾರೇ ಅಧ್ಯಕ್ಷರಾದರೂ ಈ ಸಂಸ್ಥೆಯ ಷೇರುದಾರರಾಗುತ್ತಾರೆ. ಇದರ ಜವಾಬ್ದಾರಿ ಹೊರುತ್ತಾರೆ. ಆದರೆ, ಬಿಜೆಪಿಯವರು ಯಂಗ್ ಇಂಡಿಯಾ ಸಂಸ್ಥೆ ಹಾಗೂ ನ್ಯಾಷನಲ್ ಹೆರಾಲ್ಡ್ ಸಂಸ್ಥೆಯ ಆಸ್ತಿಯನ್ನು ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ತಮ್ಮ ಆಸ್ತಿಯನ್ನಾಗಿ ಮಾಡಿಕೊಂಡಿದ್ದಾರೆ ಎಂದು ಆರೋಪ ಮಾಡಿ ನೀಡಿದ ದೂರಿನ ಮೇಲೆ ನಮ್ಮ ನಾಯಕ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿ ಇ.ಡಿ ತನಿಖಾ ಸಂಸ್ಥೆ ಮೂಲಕ ತನಿಖೆ ಮಾಡಿಸುತ್ತಿದ್ದಾರೆ ಎಂದು ಹೇಳಿದರು.
ಈ ಪ್ರಕರಣದಲ್ಲಿ ಇ.ಡಿ ಸಂಸ್ಥೆ ನನಗೆ, ನನ್ನ ಸಹೋದರನಿಗೆ, ದಿವಂಗತ ಶಾಮನೂರು ಶಿವಶಂಕರಪ್ಪ ಹಾಗೂ ಅವರ ಕುಟುಂಬದವರಿಗೆ ನೋಟೀಸ್ ನೀಡಿತ್ತು. ಈ ಸಂಸ್ಥೆಗೆ ನಮ್ಮ ಅನೇಕ ಕಾರ್ಯಕರ್ತರು ದೇಣಿಗೆ ನೀಡಿದ್ದಾರೆ. ಆಸ್ಕರ್ ಫರ್ನಾಂಡೀಸ್ ಅವರು ಈ ಸಂಸ್ಥೆಯ ಮಂಡಳಿಯ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ನಮ್ಮ ಜತೆಯಲ್ಲಿ ಸಿಎಂ ಇದ್ದಾರೆ.



