ಕೊಲ್ಕತ್ತಾ: ಪಂಚರಾಜ್ಯಗಳ ಫಲಿತಾಂಶ ಹೊರ ಬಿದ್ದ ಕೂಡಲೇ ಮೂರು ರಾಜ್ಯಗಳಲ್ಲಿ ಸ್ಪಷ್ಟ ಬಹುಮತ ಸಾಧಿಸಿರುವ ಬಿಜೆಪಿ ಇದೀಗ ಆ ರಾಜ್ಯಗಳಲ್ಲಿ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಮುಂದಾಗಿದೆ.
ಪಶ್ಚಿಮ ಬಂಗಾಳಕ್ಕೆ ನಾಳೆ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಸಂಬಂಧ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು ಭೇಟಿ ನೀಡಲಿದ್ದಾರೆ.
ಈಗಾಗಲೇ ಇನ್ನೆಂದು ಜಿಲ್ಲಾವಾರು ಬಿಜೆಪಿ ನಾಯಕರ ಅಭಿಪ್ರಾಯ ಸಂಗ್ರಹಿಸಲು ವೀಕ್ಷಕರನ್ನು ನೇಮಕ ಮಾಡಲಾಗಿದೆ. ನಾಳೆ ರಾಜನಾಥ್ ಅವರು ಪಶ್ಚಿಮ ಬಂಗಾಳದ ಪಕ್ಷದ ಪ್ರಮುಖ ನಾಯಕರು ಹಾಗೂ ಚುನಾವಣೆಯಲ್ಲಿ ವಿಜೇತರಾಗಿರುವ ನೂತನ ಶಾಸಕರ ಅಭಿಪ್ರಾಯ ಸಂಗ್ರಹ ಮಾಡಲಿದ್ದಾರೆ.
ಚುನಾವಣಾ ಸಂದರ್ಭದಲ್ಲಿ ಪಕ್ಷದ ಪ್ರಮುಖ ನಾಯಕ ಅಮಿತ್ ಶಾ ಅವರು ಬಂಗಾಳದಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಬಂಗಾಳದ ಮೂಲದವರನ್ನೇ ಸಿಎಂ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪಶ್ಚಿಮಬಂಗಾಳದ ಅಭ್ಯರ್ಥಿಯನ್ನೇ ಮುಖ್ಯಮಂತ್ರಿಯನ್ನಾಗಿ ಮಾಡಲು ಕಸರತ್ತು ನಡೆಸುತ್ತಿದೆ.
ಈಗಾಗಲೇ ಮುಖ್ಯಮಂತ್ರಿಗಾಗಿ ಐವರ ಹೆಸರು ಕೇಳಿಬಂದಿದೆ. ವಿರೋಧಪಕ್ಷದ ನಾಯಕ ಸುವೆಂದು ಅಧಿಕಾರಿ, ಸೊಪಂದಾಸ್ ಗುಪ್ತ, ಸಮಿತ್ ಭಟ್ಟಾಚಾರ್ಯ, ದಿಲೀಪ್ ಘೋಷ್ ಸೇರಿದಂತೆ ಹಲವರ ಹೆಸರು ಕೇಳಿಬರುತ್ತಿದೆ.
ನಾಳೆ ರಾಜನಾಥ್ ಸಿಂಗ್ ಅವರು ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಪಕ್ಷದ ವರಿಷ್ಠರಿಗೆ ವರದಿ ನೀಡಲಿದ್ದಾರೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಪಕ್ಷದ ಸಂಸದೀಯ ಮಂಡಳಿ ಸಭೆ ನಡೆಸಿ ಅಂತಿಮವಾಗಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದ್ದಾರೆ.
ಈ ತಿಂಗಳ 9 ರಂದು ರವೀಂದ್ರನಾಥ್ ಠಾಗೂರ್ ಅವರ ಜಯಂತಿಯಿದ್ದು, ಅಷ್ಟರೊಳಗಾಗಿ ಮುಖ್ಯಮಂತ್ರಿ ಅಭ್ಯರ್ಥಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ.
ಸಿಎಂ ಆಯ್ಕೆ ಕಸರತ್ತು ನಾಳೆ ಪಶ್ಚಿಮ ಬಂಗಾಳಕ್ಕೆ ಕೇಂದ್ರ ಸಚಿವ ರಾಜನಾಥ್ ಸಿಂಗ್



