ಬೆಂಗಳೂರು: ಈ ಬಾರಿ ಲೋಕಸಭೆ ಚುನಾವಣೆ ಸಂಬಂಧ ರಾಜ್ಯದಲ್ಲಿ ಮೊದಲನೇ ಹಂತದಲ್ಲಿ ಮತದಾನಕ್ಕೆ ಇಂದು ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ.ಈ ತಿಂಗಳ 26ರಂದು ಬೆಳಿಗ್ಗೆಯಿಂದ ಸಂಜೆಯವರೆಗೂ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
ಮತದಾನದ ಹಿನ್ನೆಲೆಯಲ್ಲಿ ಇಂದುಸಂಜೆಯಿಂದಲೇ ಮತದಾನ ನಡೆಯುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಹೇರಲಾಗಿದೆ.
ಇಂದು ಸಂಜೆ 6 ಗಂಟೆಯಿಂದ ಮತದಾನ ದಿನವಾದ ಏ.26ರ ಮಧ್ಯರಾತ್ರಿವರೆಗೂ ಮದ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ.ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರುವ ಐದು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಇಂದು ಸಂಜೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದ್ದು, ನಾಳೆಯಿಂದ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಮತದಾರರನ್ನು ಖುದ್ದಾಗಿ ಭೇಟಿಯಾಗಿ ತಮ್ಮ ಅಭ್ಯರ್ಥಿ ಪರವಾಗಿ ಮತಯಾಚನೆ ಮಾಡಲಿದ್ದಾರೆ.ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಸುಮಾರು 3000 ಹೆಚ್ಚು ಪೊಲೀಸರನ್ನು ಶಾಂತಿಯುತ ಮತದಾನಕ್ಕಾಗಿ ಭದ್ರತಾ ವ್ಯವಸ್ಥೆಗಾಗಿ ನಿಯೋಜಿಸಲಾಗಿದೆ ಎಂದು ಹೇಳಲಾಗಿದೆ.